March 20, 2026

ಟೋಯಿಂಗ್‌ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸಿ, ಸುಧಾರಣೆ: ಸಿ.ಎಂ ಬಸವರಾಜ ಬೊಮ್ಮಾಯಿ

0
BASAVARAJ-1.jpeg

ಬೆಂಗಳೂರು: ಅನಧಿಕೃತ ಸ್ಥಳಗಳಲ್ಲಿ ನಿಲುಗಡೆ ಮಾಡುವ ವಾಹನಗಳನ್ನು ಟೋಯಿಂಗ್‌ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸಿ, ಸುಧಾರಣೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ‘ಹಿಂದೆ ಪೊಲೀಸ್‌ ಇಲಾಖೆಯೇ ಟೋಯಿಂಗ್‌ ಕೆಲಸವನ್ನು ನಿರ್ವಹಿಸುತ್ತಿತ್ತು. ಈಗ ಖಾಸಗಿಯವರಿಗೆ ಗುತ್ತಿಗೆಗೆ ನೀಡಲಾಗಿದೆ. ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳಿಂದ ಟೋಯಿಂಗ್‌ ವ್ಯವಸ್ಥೆ ಕುರಿತು ಪುನರ್‌ ಪರಿಶೀಲನೆ ಅಗತ್ಯ ಎಂಬ ತೀರ್ಮಾನಕ್ಕೆ ಬರಲಾಗಿದೆ’ ಎಂದರು.

ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಅಗತ್ಯ. ಆದರೆ, ಕಾನೂನು ಜಾರಿಯ ಹೆಸರಿನಲ್ಲಿ ಅತಿರೇಕದ ವರ್ತನೆಗಳನ್ನೂ ಸಹಿಸಲಾಗದು. ಜನಸ್ನೇಹಿಯಾದ ವ್ಯವಸ್ಥೆಯನ್ನು ರೂಪಿಸುವ ಕುರಿತು ಯೋಚಿಸಲಾಗುತ್ತಿದೆ ಎಂದು ಹೇಳಿದರು.

ಟೋಯಿಂಗ್‌ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದಂತೆ ಸೋಮವಾರ ಉನ್ನತ ಮಟ್ಟದ ಸಭೆ ನಡೆಸಲಾಗುವುದು. ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌, ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದರು.

ಶಾಸಕರು, ಸಂಸದರ ಜತೆ ಚರ್ಚೆ:
ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಮತ್ತು ಬಿಜೆಪಿ ಶಾಸಕರ ನಡುವಿನ ಭಿನ್ನಾಭಿಪ್ರಾಯದ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ‘ಮೈಸೂರಿನಲ್ಲಿ ಅಭಿವೃದ್ಧಿ ವಿಚಾರದಲ್ಲಿ ಪೈಪೋಟಿ ನಡೆಯುತ್ತಿದೆ. ಸಂಸದರು ಮತ್ತು ಶಾಸಕರ ಜತೆ ಚರ್ಚಿಸಿ ಸಮಸ್ಯೆ ಪರಿಹರಿಸುತ್ತೇನೆ’ ಎಂದರು.

ಸ್ವಾರ್ಥ ಸಾಧನೆಗೆ ಆದ್ಯತೆ:
ಕಾಂಗ್ರೆಸ್‌ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಅದು ಆ ಪಕ್ಷದ ಆಂತರಿಕ ವಿಚಾರ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ನಡುವೆ ಭಿನ್ನಾಭಿಪ್ರಾಯ ಇರುವುದು ಎಲ್ಲರಿಗೂ ಗೊತ್ತು. ಕಾಂಗ್ರೆಸ್‌ ಪಕ್ಷಕ್ಕೆ ಯಾರೇ ನಾಯಕರಿದ್ದರೂ ಜನಹಿತಕ್ಕಿಂತ ಸ್ವಾರ್ಥ ಸಾಧನೆಗೆ ಆದ್ಯತೆ ನೀಡುವುದೇ ಹೆಚ್ಚು’ ಎಂದು ಹೇಳಿದರು

Leave a Reply

Your email address will not be published. Required fields are marked *

You may have missed

error: Content is protected !!