ಪ್ರಧಾನಿ ನರೇಂದ್ರ ಮೋದಿಯವರು ಸ್ವಾಮಿ ವಿವೇಕಾನಂದರ ಪುನರ್ಜನ್ಮ: ಸಚಿವೆ ಶಶಿಕಲಾ ಜೊಲ್ಲೆ
ಹೊಸಪೇಟೆ (ವಿಜಯನಗರ): ಪ್ರಧಾನಿ ನರೇಂದ್ರ ಮೋದಿಯವರ ರೂಪದಲ್ಲಿ ಸ್ವಾಮಿ ವಿವೇಕಾನಂದರ ಪುನರ್ಜನ್ಮವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನರೇಂದ್ರ ಮೋದಿಯವರು ದೇಶದ ಸಂಸ್ಕೃತಿ, ಪರಂಪರೆಯನ್ನು ವಿಶ್ವಕ್ಕೆ ಪರಿಚಯಿಸಿದ್ದರು. ಅದೇ ಕೆಲಸ ಮೋದಿಯವರು ಮಾಡುತ್ತಿದ್ದಾರೆ. ಭಾರತಕ್ಕೆ ವಿಶ್ವಗುರುವಿನ ಸ್ಥಾನ ತಂದುಕೊಟ್ಟಿದ್ದಾರೆ ಎಂದರು.
ಮೋದಿಅವರ ನೇತೃತ್ವದಲ್ಲಿ ಭಾರತ ಎಲ್ಲ ರಂಗಗಳಲ್ಲಿ ಅಭಿವೃದ್ಧಿ ಕಾಣುತ್ತಿದೆ. ದೇಶ ಸುಭದ್ರವಾಗಿದೆ. ಅಟಲ್ ಬಿಹಾರಿ ವಾಜಪೇಯಿ ನಂತರ ದೇಶ ಕಂಡ ಸಮರ್ಥ ಪ್ರಧಾನಿ ಮೋದಿಯವರು ಎಂದು ಹೇಳಿದರು.
ಬರೀ ರಾಜಕಾರಣ ಆಗಬಾರದು. ಸಮಾಜಮುಖಿ ರಾಜಕಾರಣ ಆಗಬೇಕು. ಏನು ಮಾಡಬೇಕು ಅಂದುಕೊಳ್ಳುತ್ತೇವೆ ಅದನ್ನು ಅವಕಾಶ ಸಿಕ್ಕಾಗ ಮಾಡಬೇಕು ಎಂದು ಬಸವಣ್ಣನವರ ವಚನದ ನಿದರ್ಶನದೊಂದಿಗೆ ವಿವರಿಸಿದರು.
ಫೆ. 4 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸುವರು. ನಾನು ಎಲ್ಲರ ಸಹಕಾರದೊಂದಿಗೆ ಐತಿಹಾಸಿಕ, ಧಾರ್ಮಿಕವಾಗಿ ಪ್ರಾಮುಖ್ಯತೆ ಹೊಂದಿರುವ ವಿಜಯನಗರ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವೆ ಎಂದು ತಿಳಿಸಿದರು.




