ಕುಂದಾಪುರ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ತಡೆದು ಕಾಲೇಜು ಗೇಟ್ ಬಂದ್ ಮಾಡಿದ ಪ್ರಾಂಶುಪಾಲ
ಉಡುಪಿ: ಕುಂದಾಪುರ ಸರ್ಕಾರಿ ಜೂನಿಯರ್ ಕಾಲೇಜಿಗೆ ಗುರುವಾರ ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ.
26 ವಿದ್ಯಾರ್ಥಿನಿಯರು ಎಂದಿನಂತೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಸಂದರ್ಭ ಗೇಟಿನಲ್ಲಿಯೇ ಅವರನ್ನು ತಡೆದ ಪ್ರಾಂಶುಪಾಲ ಬಿ.ಜಿ.ರಾಮಕೃಷ್ಣ, ಹಿಜಾಬ್ ಇಲ್ಲದೆ ಬಂದರೆ ಮಾತ್ರ ಪ್ರವೇಶ ನೀಡುವುದಾಗಿ ಪಟ್ಟು ಹಿಡಿದರು.
ಇದರಿಂದ ಅಸಮಾಧಾನಗೊಂಡ ವಿದ್ಯಾರ್ಥಿನಿಯರು ಪ್ರಾಂಶುಪಾಲರೊಂದಿಗೆ ವಾಗ್ವಾದಕ್ಕಿಳಿದು ಕಾಲೇಜಿನ ಒಳಬಿಡುವಂತೆ ಪರಿಪರಿಯಾಗಿ ಬೇಡಿ, ಕಣ್ಣೀರು ಹಾಕಿದರೂ ಪ್ರಾಂಶುಪಾಲರು ಅನುಮತಿ ನೀಡಲಿಲ್ಲ.
ಕಡ್ಡಾಯವಾಗಿ ವಸ್ತ್ರ ಸಂಹಿತೆ ಪಾಲಿಸುವಂತೆ ಸರ್ಕಾರದ ನಿರ್ದೇಶನವಿದ್ದು ಪಾಲಿಸಿದರೆ ಮಾತ್ರ ಕಾಲೇಜಿಗೆ ಪ್ರವೇಶ ನೀಡಲಾಗುವುದು. ಬುಧವಾರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸದೆ ಸಮವಸ್ತ್ರ ಮಾತ್ರ ಹಾಕಿಕೊಂಡು ಕಾಲೇಜಿಗೆ ಬರಬೇಕು ಎಂಬ ನಿರ್ಣಯ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳು ನಿರ್ಣಯವನ್ನು ಪಾಲಿಸಲೇಬೇಕು ಎಂದು ತಿಳಿಸಿದರು.




