ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿ ಗೈರು: ಬಿಜೆಪಿ ಯಿಂದ ಟೀಕೆ
ಹೈದರಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭೇಟಿ ಸಂದರ್ಭದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಗೈರುಹಾಜರಾಗಿದ್ದು, ಈ ಧೋರಣೆಗಾಗಿ ವಿರೋಧಪಕ್ಷ ಬಿಜೆಪಿ ತೀವ್ರವಾಗಿ ಟೀಕಿಸಿದೆ.
ಶ್ರಿರಾಮಾನುಜಾಚಾರ್ಯರ 216 ಅಡಿ ಎತ್ತರದ ಪ್ರತಿಮೆ ಅನಾವರಣ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲು ಪ್ರಧಾನಿ ಮೋದಿ ರಾಜ್ಯಕ್ಕೆ ಒಂದು ದಿನದ ಭೇಟಿ ನೀಡಿದ್ದರು.
ಜ್ವರದ ಕಾರಣ ನೀಡಿದ್ದ ಮುಖ್ಯಮಂತ್ರಿ ಅವರು ತಮ್ಮ ಪರವಾಗಿ ಸಚಿವ ತಲಸಾನಿ ಶ್ರೀನಿವಾಸ ಯಾದವ್ ಅವರನ್ನು ಪ್ರಧಾನಿ ಭೇಟಿ ಕಾರ್ಯಕ್ರಮಕ್ಕೆ ನಿಯೋಜಿಸಿದ್ದರು.
ಕೆ.ಚಂದ್ರಶೇಖರರಾವ್ ಅವರು ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಜೊತೆಗೆ ಸಂಘರ್ಷ ನಡೆಸಿದ್ದು, ಭತ್ತ ಖರೀದಿಗೆ ನಿರಾಕರಣೆ, ವಿವಿಧ ಕ್ಷೇತ್ರಗಳಲ್ಲಿ ನೆರವು ನೀಡದ ಕಾರಣಕ್ಕೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.
ಕೇಂದ್ರ ಬಜೆಟ್ ನಂತರವೂ ಟೀಕಾಪ್ರಹಾರ ಮಾಡಿದ್ದು, ತಾವು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಸಂಪರ್ಕದಲ್ಲಿದ್ದು, ಶೀಘ್ರವೇ ಅವರನ್ನು ಭೇಟಿ ಆಗುವುದಾಗಿಯೂ ಹೇಳಿದ್ದರು.
ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಹಕ್ಕುಗಳನ್ನು ಹತ್ತಿಕ್ಕುತ್ತಿದೆ. ದೇಶಕ್ಕೆ ಹೊಸ ಸಂವಿಧಾನದ ಅಗತ್ಯವಿದೆ ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದರು. ಬಿಜೆಪಿ ಈ ಹೇಳಿಕೆಯ ವಿರುದ್ಧ ಪ್ರತಿಭಟನೆಯನ್ನೂ ನಡೆಸಿತ್ತು.




