ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ: ಸ್ವಯಂ ಪ್ರೇರಿತ ದೂರು ದಾಖಲಿಸಿ 18 ಮಂದಿಯ ಬಂಧನ
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು, ಘಟನೆಯ ಸಂಬಂಧ 18 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಬನಹಟ್ಟಿಯ ಮಹಾತ್ಮಾ ಗಾಂಧಿ ವೃತ್ತದಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಮಂಗಳವಾರವೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರಿಂದ ಮತ್ತೊಂದು ಗುಂಪು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿತು. ಪರಸ್ಪರ ಘೋಷಣೆ ಕೂಗಿ, ಕಾಲೇಜು ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಮೊದಲಿಗೆ ಪೊಲೀಸರು ಕಡಿಮೆ ಪ್ರಮಾಣದಲ್ಲಿದ್ದ ಕಾರಣ ಕಲ್ಲು ತೂರಾಟ ನಡೆಯುವಲ್ಲಿ ಕಾರಣವಾಯಿತು. ಬೆಳಿಗ್ಗೆಯಿಂದಲೇ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾದ ಕಾರಣ ನಗರದಾದ್ಯಂತ ಪೊಲೀಸ್ ಕಣ್ಗಾವಲು ಹೆಚ್ಚಾಗಿತ್ತು. ಜಮಖಂಡಿ-ಕುಡಚಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು ಹಿಜಾ ವಿರೋಧಕ್ಕೆ ಭಾರೀ ಆಕ್ರೋಶ ಹೊರಹಾಕಿದರು.




