ಬಿಜೆಪಿ ನಾಯಕರ ಮಕ್ಕಳ್ಯಾರೂ ಕೇಸರಿ ಶಾಲು ಹಾಕಿಕೊಂಡು ಹೋರಾಟ ಮಾಡುತ್ತಿಲ್ಲ: ಎಚ್.ಡಿ.ಕುಮಾರಸ್ವಾಮಿ
ರಾಮನಗರ: ‘ಬಿಜೆಪಿ ನಾಯಕರ ಮಕ್ಕಳ್ಯಾರೂ ಕಳೆದ 15 ದಿನದಿಂದ ಕೇಸರಿ ಶಾಲು ಹಾಕಿಕೊಂಡು ಹೋರಾಟ ಮಾಡುತ್ತಿಲ್ಲ. ಅಮಾಯಕ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿಕೊಂಡು ಗದ್ದಲ ಎಬ್ಬಿಸುವುದು ಸರಿಯಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು.
ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು. ಉಡುಪಿಯ ಒಂದು ಶಾಲೆಯಲ್ಲಿ ಆರಂಭವಾದ ಈ ಪ್ರಕರಣ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ದೊಡ್ಡ ದೊಡ್ಡ ಖಾಸಗಿ ಶಾಲೆಗಳಲ್ಲಿ ಈ ಸಂಘರ್ಷ ನಡೆದಿಲ್ಲ. ಸರ್ಕಾರಿ ಶಾಲೆಗಳಲ್ಲೇ ಈ ವಿವಾದ ಬುಗಿಲೆದ್ದಿದೆ. ಬಿಜೆಪಿ–ಕಾಂಗ್ರೆಸ್ ನಾಯಕರ ಮಕ್ಕಳ್ಯಾರೂ ಈ ಶಾಲೆಗಳಲ್ಲಿ ಓದುತ್ತಿಲ್ಲ. ಅವರೆಲ್ಲ ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ತಮಾಷೆ ನೋಡುತ್ತಿದ್ದಾರೆ. ಸರ್ಕಾರಿ ಶಾಲೆಗೆ ಕಳುಹಿಸಿದ ತಮ್ಮ ಮಕ್ಕಳನ್ನು ಈ ರೀತಿ ದುರುಪಯೋಗಪಡಿಸಿಕೊಳ್ಳುವುದನ್ನು ಪೋಷಕರು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.
ಪಕ್ಷ–ಸಂಘಟನೆಗಳು ತಮ್ಮ ತೆವಲಿಗೆ ಈ ಮಕ್ಕಳನ್ನು ಉಪಯೋಗಪಡಿಸಿಕೊಳ್ಳುತ್ತಿವೆ. ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿರುವವರ ವಿಡಿಯೊಗಳು ಈಗಾಗಲೇ ದಾಖಲಾಗಿವೆ. ಈಗಾಗಲೇ 10–12 ಮಕ್ಕಳ ಮೇಲೆ ಎಫ್ಐಆರ್ ಸಹ ದಾಖಲಾಗಿರುವುದು ಆತಂಕದ ವಿಚಾರ. ಈ ವಿಡಿಯೊಗಳನ್ನು ಇಟ್ಟುಕೊಂಡು ಮುಂದೆ ಇಂತಹ ಸಾವಿರಾರು ಮಕ್ಕಳನ್ನು ಕೋರ್ಟು–ಕಚೇರಿ ಎಂದು ಅಲೆಸಲಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.




