ಹಿಜಾಬ್ ಕುರಿತ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ
ನವದೆಹಲಿ: ತೀವ್ರ ವಿವಾದಕ್ಕೆ ಕಾರಣವಾಗಿರುವ ಹಿಜಾಬ್ ವಿವಾದದ ಪ್ರಕರಣದ ಕುರಿತು ಮೊದಲು ಕರ್ನಾಟಕ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿ, ನಂತರ ಈ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ಪರಿಗಣಿಸಲಿದೆ ಎಂದು ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ ಅವರು ತಿಳಿಸುವ ಮೂಲಕ ಹಿಜಾಬ್ ಕುರಿತ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ್ದಾರೆ ಎಂದು ವರದಿ ತಿಳಿಸಿದೆ.
ಇದೊಂದು ಧಾರ್ಮಿಕ ವಿಚಾರವಾಗಿದ್ದು, ಕರ್ನಾಟಕ ಹೈಕೋರ್ಟ್ ಈ ಪ್ರಕರಣವನ್ನು ಸುಪ್ರೀಂಕೋರ್ಟ್ ಗೆ ವರ್ಗಾಯಿಸುವಂತೆ ಆದೇಶ ನೀಡಲು ಹಿರಿಯ ವಕೀಲ, ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು ಮನವಿ ಮಾಡಿಕೊಂಡ ಬಳಿಕ ಸಿಜೆಐ ರಮಣ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಹಿಜಾಬ್ ವಿವಾದದಿಂದಾಗಿ ಕರ್ನಾಟಕದಲ್ಲಿ ಶಾಲಾ, ಕಾಲೇಜುಗಳು ಬಂದ್ ಆಗಿದೆ. ಕೆಲವೆಡೆ ಕಲ್ಲುತೂರಾಟ, ಹೊಡೆದಾಟ ನಡೆದಿದೆ. ಈ ನಿಟ್ಟಿನಲ್ಲಿ ನಮ್ಮ ಮನವಿ ಪರಿಗಣಿಸಬೇಕಾದ ಅಗತ್ಯವಿದೆ. ಹಿಜಾಬ್ ವಿವಾದ ಇದೀಗ ದೇಶಾದ್ಯಂತ ಹಬ್ಬತೊಡಗಿದೆ ಎಂದು ಕಪಿಲ್ ಸಿಬಲ್ ಹೇಳಿದರು.




