ಹಿಜಾಬ್-ಕೇಸರಿ ಶಾಲು ವಿವಾದ: ಫೆ.16ವರೆಗೆ ಪಿಯುಸಿ, ಪದವಿ ಕಾಲೇಜುಗಳಿಗೆ ರಜೆ
ಬೆಂಗಳೂರು: ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ಫೆ.14ರ ವರೆಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ವಿಶ್ವವಿದ್ಯಾಲಯಗಳು, ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ರಜೆ ಅನ್ವಯಿಸುತ್ತದೆ. ಆದರೆ, ಈ ಅವಧಿಯಲ್ಲಿ ಆನ್ಲೈನ್ ಬೋಧನೆ ಎಂದಿನಂತೆಯೇ ನಡೆಯಲಿದೆ.
ಜೊತೆಗೆ, ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.




