ಸೇತುವೆ ಮೇಲಿಂದ ಸರ್ವೀಸ್ ರಸ್ತೆಗೆ ಉರುಳಿ ಬಿದ್ದ ಬಸ್: ಇಬ್ಬರು ಮೃತ್ಯು
ಹಾವೇರಿ: ಖಾಸಗಿ ಬಸ್ಸೊಂದು ಪಲ್ಟಿಯಾಗಿ ಸೇತುವೆ ಮೇಲಿಂದ ಸರ್ವೀಸ್ ರಸ್ತೆಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ದೇವಗಿರಿ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ.
ಬೆಂಗಳೂರಿನಿಂದ ಗೋಕಾಕ್ ಗೆ ಸಂಚರಿಸುತ್ತಿದ್ದ ವಿಆರ್ಎಲ್ ಬಸ್ ಪಲ್ಟಿಯಾಗಿದ್ದು, ಚಾಲಕ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಹದಿನೈದು ಜನರಿಗೆ ಗಾಯಗಳಾಗಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಬಳಿಯ ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೇತುವೆ ಮೇಲೆ ವಿಆರ್ಎಲ್ ಬಸ್ ಸಂಚರಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಪಲ್ಟಿಯಾಗಿ ಸರ್ವೀಸ್ ರಸ್ತೆಗೆ ಬಿದ್ದಿದೆ. ಭಯಂಕರ ಶಬ್ದ ಕೇಳಿದ ಸ್ಥಳೀಯರು ಕೂಡಲೇ ಸಹಾಯಕ್ಕೆ ದೌಡಾಯಿಸಿ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯಕ್ಕೆ ಕೈ ಹಾಕಿದರು.




