ಬೈಂದೂರು: ಡಿವೈಡರ್ಗೆ ಢಿಕ್ಕಿ ಹೊಡೆದ ಕಾರು, ಓರ್ವ ಮೃತ್ಯು, ಮೂವರಿಗೆ ಗಾಯ
ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರ ಕಿರಿಮಂಜೇಶ್ವರ ಬಳಿ ಮಾ. 2ರ ಸಂಜೆ ಕಾರೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ
ಮೃತರನ್ನು ಬೆಂಗಳೂರಿನ ಆರ್ ವಿಜಯ್ ಅವರ ಪುತ್ರ ಅಕ್ಷಯ್ (23) ಎಂದು ಗುರುತಿಸಲಾಗಿದ್ದು, ತೇಜಸ್ (24), ಪವನ್ (23) ಮತ್ತು ಹರ್ಷ (24) ಗಾಯಗೊಂಡಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿರಿಮಂಜೇಶ್ವರ ಬಳಿ ಕಾರು ಡಿವೈಡರ್ಗೆ ಢಿಕ್ಕಿ ಹೊಡೆದ ಬಳಿಕ ಹೆದ್ದಾರಿಯ ಇನ್ನೊಂದು ಬದಿಗೆ ಹಾರಿದೆ. ಹಿಂಬದಿಯಲ್ಲಿ ಕುಳಿತಿದ್ದ ಅಕ್ಷಯ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಕೂಡಲೇ ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಯಿತು.
ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಂದೂರು ಪೊಲೀಸ್ ಉಪನಿರೀಕ್ಷಕ ಪವನ್ ನಾಯಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




