ಕಡಬ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ- ನಗದು ದೋಚಿ ಪರಾರಿ..!
ಕಡಬ: ಕೊರೊನಾ ಹಾವಳಿ ಕಡಿಮೆಯಾಗುತ್ತಿದ್ದಂತೆ ಕಳ್ಳರ ಹಾವಳಿ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸಮೀಪ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರ ತಂಡ ಲಕ್ಷ ರೂಪಾಯಿ ಮೌಲ್ಯದ ನಗ- ನಗರನ್ನು ಲೂಟಿ ಮಾಡಿ ಪರಾರಿಯಾಗಿದ್ದಾರೆ.
ಗಂಡಿಬಾಗಿಲು ಮಸೀದಿ ಬಳಿ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ಕಳ್ಳತನ ವಾಗಿದ್ದು ಕಪಾಟಿನಲ್ಲಿ ಇದ್ದ 14 ಪವನ್ ಚಿನ್ನಾಭರಣ ಮತ್ತು 42 ಸಾವಿರ ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ನಿನ್ನೆ ರಾತ್ರಿ ಆತೂರು ಮಸೀದಿಯಲ್ಲಿ ದಿಕ್ರ್ ಹಲ್ಕಾ ಕಾರ್ಯಕ್ರಮ ಇದ್ದುದರಿಂದ ಮನೆಯವರು ಸಂಜೆ 7 ಗಂಟೆಯ ಹೊತ್ತಿಗೆ ಮನೆಗೆ ಬೀಗ ಹಾಕಿ ಹೋಗಿದ್ದು, ಕಾರ್ಯಕ್ರಮ ಮುಗಿದ ಬಳಿಕ ರಾತ್ರಿ 11 ಗಂಟೆಯ ಹೊತ್ತಿಗೆ ಮರಳಿ ಮನೆಗೆ ಬಂದಾಗ ಘಟನೆ ತಿಳಿದು ಬಂದಿದೆ.
ಈ ಕಳ್ಳತನವಾದ ಮನೆಗೆ ಡಿವೈಎಸ್ಪಿ ಗಾನಾ ಟಿ. ಕುಮಾರ್, ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.




