ನ್ಯಾಯಾಂಗ ಬಂಧನದಲ್ಲಿದ್ದ ವಕೀಲ ಜಗದೀಶ್ಗೆ ಷರತ್ತುಬದ್ಧ ಜಾಮೀನು
ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಕೊಲೆಯತ್ನ ಕೇಸ್ನಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವಕೀಲ ಜಗದೀಶ್ಗೆ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
50 ಸಾವಿರ ಮೊತ್ತದ ವೈಯಕ್ತಿಕ ಬಾಂಡ್, ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷ್ಯಗಳನ್ನು ನಾಶಪಡಿಸಬಾರದು ಅಥವಾ ಅವುಗಳ ಮೇಲೆ ಪ್ರಭಾವ ಬೀರಬಾರದು.
ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಿ ಕೋರ್ಟ್ ಜಾಮೀನು ನೀಡಿದೆ.
ಸದ್ಯ ಹಲಸೂರು ಗೇಟ್ ಠಾಣೆ ಪೊಲೀಸರು ದಾಖಲಿಸಿರುವ ಕೊಲೆ ಯತ್ನ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು, ಕೊಡಿಗೇಹಳ್ಳಿ ಠಾಣೆ ಪೊಲೀಸರು ದಾಖಲಿಸಿರುವ ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಸಿಗಬೇಕಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ವಾದ ಮಂಡನೆ ಮುಕ್ತಾಯವಾಗಿದ್ದು, ಕೋರ್ಟ್ ಆದೇಶವನ್ನು ಸೋಮವಾರಕ್ಕೆ (ಮಾ.7) ಮುಂದೂಡಿದೆ.
ಹೀಗಾಗಿ, ಜಗದೀಶ್ ಬಿಡುಗಡೆಗೊಳ್ಳಲು ಮತ್ತೊಂದು ಪ್ರಕರಣದಲ್ಲಿಯೂ ಜಾಮೀನು ಸಿಗಬೇಕಿದೆ. ಅರ್ಜಿದಾರ ಜಗದೀಶ್ ಪರ ವಕೀಲರಾದ ಹರೀಶ್ ಪ್ರಭು ಹಾಗೂ ಬಾಲನ್ ವಾದ ಮಂಡಿಸಿದ್ದರು.





