ಮನೆಯ ಕಸದ ತೊಟ್ಟಿಯಲ್ಲೂ ಆಭರಣ, ನಗದು, ಚಿನ್ನದ ಗಟ್ಟಿ ಪತ್ತೆ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 18 ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್ಐಆರ್ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಬುಧವಾರ ಬೆಳಿಗ್ಗೆ 75 ಸ್ಥಳಗಳಲ್ಲಿ ಶೋಧ ಆರಂಭಿಸಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೋಪಿತ ಅಧಿಕಾರಿಗಳ ಮನೆಗಳು, ಸಂಬಂಧಿಕರು ಮತ್ತು ನಿಕಟವರ್ತಿಗಳ ಮನೆಗಳು, ಸರ್ಕಾರಿ ಕಚೇರಿಗಳು ಮತ್ತು ಖಾಸಗಿ ಕಚೇರಿಗಳಲ್ಲಿ ಶೋಧ ನಡೆಸಲಾಗುತ್ತಿದೆ. ಎಸಿಬಿಯ 300ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.
ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳ ಮನೆಗಳಲ್ಲಿ ಚಿನ್ನ, ಬೆಳ್ಳಿ, ನಗದು, ಶ್ರೀಗಂಧದ ತುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಸಂಪತ್ತು ದೊರೆತಿದೆ. ಮನೆಯ ಕಸದ ತೊಟ್ಟಿಯಲ್ಲೂ ಆಭರಣಗಳನ್ನು ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ.




