ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣ: ಆರೋಪಿ ಆದಿತ್ಯ ರಾವ್ ಗೆ 20 ವರ್ಷ ಶಿಕ್ಷೆ ಪ್ರಕಟ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯರಾವ್ ಗೆ ನ್ಯಾಯಾಲಯ ತೀರ್ಪು ನೀಡಿ ಆತನಿಗೆ 20 ವರ್ಷ ಶಿಕ್ಷೆ, 10 ಸಾವಿರ ದಂಡ ವಿಧಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ಆದೇಶ ನೀಡಿದೆ.
ಸ್ಫೋಟಕ ತಡೆ ಕಾಯ್ದೆಯಡಿ 5 ವರ್ಷ ಹಾಗೂ ಯುಎಪಿಎ ಕಾಯ್ದೆಯಡಿ 20 ವರ್ಷ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಜ.20ರಂದು ಬೆಳಗ್ಗೆ 9.05ರ ಸುಮಾರಿಗೆ ರಿಕ್ಷಾವೊಂದರಲ್ಲಿ ಚಾಲಕ ಸೇರಿದಂತೆ ಇಬ್ಬರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಅದರಲ್ಲಿ ಆದಿತ್ಯ ರಾವ್ ಆಟೋ ರಿಕ್ಷಾದಿಂದ ಇಳಿದು ಸ್ಫೋಟಕ ತುಂಬಿದ ಬ್ಯಾಗನ್ನು ನಿರ್ಗಮನ ದ್ವಾರದ ಸಮೀಪದ ಟಿಕೆಟ್ ಕೌಂಟರ್ ಬಳಿಯಿರುವ ಆಸನದ ಮೇಲಿರಿಸಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.
ಬಾಂಬ್ ಇರಿಸಿದ ಬಳಿಕ ಆರೋಪಿ ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ಜ. 22 ರಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ಆತನನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದರು. ಮಂಗಳೂರು ಪೊಲೀಸ್ ತಂಡ ಬೆಂಗಳೂರಿಗೆ ತೆರಳಿ ಆತನನ್ನು ಬಂಧಿಸಿ ಮಂಗಳೂರಿಗೆ ಕರೆ ತಂದಿತ್ತು.
ಇದೀಗ ನ್ಯಾಯಾಲಯ ಆತನನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿ 20 ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.




