ಹಿಜಾಬ್ ಅನುಮತಿ ಕೋರಿ ಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯರು ಉಗ್ರ ಸಂಘಟನೆಯ ಸದಸ್ಯರು ಎಂದ ಬಿಜೆಪಿ ನಾಯಕ
ಉಡುಪಿ: ಶಾಲಾ-ಕಾಲೇಜ್ ಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯರು ಉಗ್ರ ಸಂಘಟನೆಯ ಸದಸ್ಯರು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ಆರೋಪಿಸಿದ್ದಾರೆ.
ಹೈಕೋರ್ಟ್ ತೀರ್ಪಿನ ವಿರುದ್ಧ ಮಾತನಾಡಿದ ಆರು ವಿದ್ಯಾರ್ಥಿನಿಯರು ದೇಶ ವಿರೋಧಿಗಳು ಮತ್ತು ಭಯೋತ್ಪಾದಕ ಸಂಘಟನೆಯ ಸದಸ್ಯರು ಎಂದು ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಯಶ್ಪಾಲ್ ಸುವರ್ಣ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರು ವಿದ್ಯಾರ್ಥಿಗಳು ಹೈಕೋರ್ಟ್ ವಿರುದ್ಧ ಮಾತನಾಡುವ ಮೂಲಕ ನ್ಯಾಯಾಂಗಕ್ಕೆ ಅವಮಾನ ಮಾಡಿದ್ದಾರೆ. ”ನ್ಯಾಯಾಂಗ ನಿಂದನೆ ಮಾಡುವ ಮೂಲಕ ಅವರು ಭಾರತದಲ್ಲಿರಲು ಅರ್ಹರಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ” ಎಂದು ಹೇಳಿದರು.
ಆರು ಹುಡುಗಿಯರಿಂದಾಗಿಯೇ ಸಂಪೂರ್ಣ ಗೊಂದಲ ಶುರುವಾಗಿದೆ ಎಂದ ಸುವರ್ಣ ಅವರು, ಡ್ರೆಸ್ ಕೋಡ್ ಕುರಿತ ಕಾಲೇಜಿನ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದರಿಂದ ಸಮಸ್ಯೆ ಬಗೆಹರಿದಿದೆ. ಆದರೆ ನ್ಯಾಯಾಲಯದ ಮೆಟ್ಟಿಲೇರಿದ್ದ ಬಾಲಕಿಯರು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿ ನ್ಯಾಯಾಂಗಕ್ಕೆ ಅಗೌರವ ತೋರಿದ್ದಾರೆ. “ನಾನು ಈ ಹಿಂದೆಯೂ ಹೇಳಿದ್ದೆ ಮತ್ತು ಈಗ ನಾನು ಅದನ್ನು ಮತ್ತೊಮ್ಮೆ ಪುನರಾವರ್ತಿಸುತ್ತೇನೆ. ಅವರು ಕೇವಲ ವಿದ್ಯಾರ್ಥಿಗಳಲ್ಲ. ಅವರು ಭಯೋತ್ಪಾದಕ ಸಂಘಟನೆಯ ಸದಸ್ಯರು ಎಂದಿದ್ದಾರೆ.
ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ಈ ತೀರ್ಪು ನೀಡಿದೆ. ನ್ಯಾಯಾಲಯದ ವಿರುದ್ಧ ಬಾಲಕಿಯರು ನೀಡಿರುವ ಹೇಳಿಕೆಯು ಅವರು ಭಯೋತ್ಪಾದಕ ಸಂಘಟನೆಯ ಸದಸ್ಯರು ಎಂಬುದನ್ನು ಸಾಬೀತುಪಡಿಸುತ್ತದೆ. ಹೀಗಾಗಿ ರಾಜ್ಯ ಸರ್ಕಾರ ಯುವತಿಯರು ನೀಡಿರುವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.




