ಮಾಣಿ: ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ರಕ್ಷಣೆಯಲ್ಲಿ ಸ್ಥಳೀಯ ಸರಕಾರದ ಪಾತ್ರ ತರಬೇತಿ ಕಾರ್ಯಕ್ರಮ
ಬಂಟ್ವಾಳ: ತರಬೇತಿಯಿಂದ ಸಿಗುವ ಉತ್ತಮ ಮಾಹಿತಿಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾಮಾಜಿಕ ಬದುಕಿನಲ್ಲಿ ಅನುಷ್ಠಾನಗೊಳಿಸಿದಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.

ಮಾಣಿ ಗ್ರಾಮ ಪಂಚಾಯತ್ ಮತ್ತು ಮಂಗಳೂರಿನ ಪಡಿ ಸಂಸ್ಥೆ ಜಂಟಿಯಾಗಿ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ರಕ್ಷಣೆಯಲ್ಲಿ ಸ್ಥಳೀಯ ಸರಕಾರದ ಪಾತ್ರ ಎನ್ನುವ ವಿಚಾರದಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿಕ್ಷಣದಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಪರಿಣಾಮಕಾರಿಯಾಗಿ ವಿದ್ಯೆ ಮಕ್ಕಳಿಗೆ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಸರಕಾರ ಮತ್ತು ಶಿಕ್ಷಣ ಇಲಾಖೆ ಹಲವು ವರ್ಷಗಳಿಂದ ಶ್ರಮಿಸುತ್ತಿದೆ ಎಂದು ಅವರು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ತರಬೇತಿಯನ್ನು ನಡೆಸಿಕೊಟ್ಟ ನಿವೃತ್ತ ಮುಖ್ಯೋಪಾಧ್ಯಾಯಿನಿ ಕಮಲ ಗೌಡರವರು, ಸ್ಥಳೀಯ ಸರ್ಕಾರವಾದ ಗ್ರಾಮ ಪಂಚಾಯತ್ ಸರ್ಕಾರಿ ಶಾಲೆಗಳ ಆಗುಹೋಗುಗಳಲ್ಲಿ ಯಾವ ರೀತಿಯಾಗಿ ಕಾರ್ಯಪ್ರವೃತ್ತರಾಗಬೇಕು ಎನ್ನುವ ಹಾಗೆ ಸವಿವರವಾಗಿ ತಿಳಿಸಿಕೊಟ್ಟರು.

ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ ಉಪಸ್ಥಿತರಿದ್ದರು.
ಪಂಚಾಯತ್ ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ಇಬ್ರಾಹಿಂ.ಕೆ.ಮಾಣಿ, ರಮಣಿ.ಡಿ.ಪೂಜಾರಿ, ನಾರಾಯಣ ಶೆಟ್ಟಿ, ಸುಜಾತ, ಮಿತ್ರಾಕ್ಷಿ, ಶಾಲಾ ಶಿಕ್ಷಕ ನಾಗೇಶ್ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಸ್ವಾಗತಿಸಿದರು. ಪಡಿ ಸಂಸ್ಥೆಯ ಸಂಯೋಜಕಿ ಲಲಿತಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಷಂಚಾಯತ್ ಸಿಬ್ಬಂದಿ ಸಹಕರಿಸಿದರು.




