ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ಬಗ್ಗೆ ಮಾಲಕನಿಗೆ ಗೊತ್ತಿಲ್ಲದಿದ್ದರೆ ಆತನ ವಿರುದ್ಧ ಪ್ರಕರಣ ದಾಖಲು ಇಲ್ಲ: ಹೈಕೋರ್ಟ್
ಬೆಂಗಳೂರು: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮನೆ ಮಾಲಕನಿಗೆ ಗೊತ್ತಿಲ್ಲದಿದ್ದರೆ ಆತನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅವಕಾಶವಿಲ್ಲ ಎಂದು ಹೈಕೋಟ್ ಹೇಳಿದೆ.
ವೇಶ್ಯವಾಟಿಕೆ ನಡೆಸುತ್ತಿದ್ದ ಆರೋಪ ಸಂಬಂಧ ಚಂದ್ರಲೇಔಟ್ ಠಾಣಾ ಪೊಲೀಸರು ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ನಾಗರಭಾವಿ ನಿವಾಸಿ ಪ್ರಭುರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿದ್ದು, ಅರ್ಜಿದಾರರ ವಿರುದ್ಧದ ಎಫ್ಐಆರ್ ರದ್ದುಪಡಿಸಿದೆ.
ಮಾನವ ಕಳ್ಳಸಾಗಣೆ ತಡೆ ಕಾಯ್ದೆಯ ಸೆಕ್ಷನ್ 3(2)(ಬಿ) ಪ್ರಕಾರ ಯಾವುದೇ ಜಾಗದಲ್ಲಿ ಏನು ನಡೆಯುತ್ತಿದೆ ಎನ್ನುವುದು ಅದರ ಮಾಲಕನಿಗೆ ಗೊತ್ತಿದ್ದಾಗ ಮಾತ್ರ ಆತನ ವಿರುದ್ಧ ಪ್ರಕರಣ ದಾಖಲಿಸಬಹುದಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.




