ನಟಿ ಕಂಗನಾ ರನೌತ್ ಪ್ರಕರಣವೊಂದರ ಆರೋಪಿ ಎಂಬುದನ್ನು ಮರೆಯಲು ಸಾಧ್ಯವಿಲ್ಲ: ಮುಂಬೈ ಕೋರ್ಟ್
ಮುಂಬೈ: ಕಂಗನಾ ರನೌತ್ ಸೆಲೆಬ್ರಿಟಿಯಾಗಿರಬಹುದು, ವೃತ್ತಿಪರ ಹುದ್ದೆಗಳನ್ನು ಹೊಂದಿರಬಹುದು, ಆದರೆ ಅವರು ಪ್ರಕರಣವೊಂದರಲ್ಲಿ ಆರೋಪಿ ಎಂಬುದನ್ನು ಮರೆಯಲು ಸಾಧ್ಯವಿಲ್ಲ ಎಂದು ಮುಂಬೈ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ತಪರಾಕಿ ಹಾಕಿದೆ.
ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಗೆ ಹಾಜರಾಗಲು ಶಾಶ್ವತ ವಿನಾಯಿತಿ ನೀಡುವಂತೆ ಕಂಗನಾ ಅವರು ಮನವಿ ಮಾಡಿದ್ದರು. ಹಿಂದಿ ಸಿನಿಮಾ ಕ್ಷೇತ್ರದ ದೊಡ್ಡ ನಟಿಯರ ಪೈಕಿ ತಾವು ಒಬ್ಬರಾಗಿದ್ದು, ದೇಶ ಮತ್ತು ವಿದೇಶದ ವಿವಿಧ ಭಾಗಗಳಿಗೆ ಸಂಚರಿಸುತ್ತಿರಬೇಕಾಗುತ್ತದೆ. ಹಾಗಾಗಿ ಕೋರ್ಟ್ಗೆ ಹಾಜರಾಗುವ ಪ್ರಕ್ರಿಯೆಯಿಂದ ವಿನಾಯಿತಿ ನೀಡಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದರು.
ನಟಿಯ ಮನವಿ ತಿರಸ್ಕರಿಸಿದ ಸ್ಥಳೀಯ ನ್ಯಾಯಾಲಯ, ಕಂಗನಾ ಸೆಲೆಬ್ರಿಟಿಯಾದ ಕಾರಣ ವಿಚಾರಣೆಯ ಹಾಜರಾತಿಯಿಂದ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದಿದೆ.
ವಾಹಿನಿಯೊಂದರ ಸಂದರ್ಶನವೊಂದರ ಕಂಗನಾ ರಣಾವತ್ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ. ಇದರಿಂದ ತಮ್ಮ ಘನತೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಜಾವೇದ್ ಅಖ್ತರ್ ಅವರು 2020ರಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.




