ರತನ್ ಟಾಟಾ ಗೆ ಭಾರತ ರತ್ನ ಕೋರಿ ಸಲ್ಲಿಸಿರುವ ಅರ್ಜಿಯನ್ನು ರದ್ದುಗೊಳಿಸಿದ ದೆಹಲಿ ಹೈಕೋರ್ಟ್
ನವದೆಹಲಿ: ಭಾರತದ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಹೈಕೋರ್ಟ್ ನ ಹಂಗಾಮಿ ಚೀಫ್ ಜಸ್ಟೀಸ್ ವಿಪಿನ್ ಸಾಂಘಿ ನೇತೃತ್ವದ ಪೀಠ, ವ್ಯಕ್ತಿಯೊಬ್ಬರಿಗೆ ದೇಶದ ಪ್ರತಿಷ್ಠಿತ ನಾಗರಿಕ ಪ್ರಶಸ್ತಿಯನ್ನು ನೀಡುವಂತೆ ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡುವುದಿಲ್ಲ ಎಂದು ಹೇಳಿದೆ.
ಇನ್ನು ಇದು ಯಾವ ರೀತಿಯ ಮನವಿ? ಭಾರತ ರತ್ನ ಪ್ರಶಸ್ತಿ ನೀಡುವಂತೆ ಸರ್ಕಾರಕ್ಕೆ ಕೋರ್ಟ್ ಹೇಳಬೇಕೇ? ಎಂದು ಜಸ್ಟೀಸ್ ನವೀನ್ ಚಾವ್ಲಾ ಪ್ರಶ್ನಿಸಿರುವುದಾಗಿ ವರದಿಯಾಗಿದೆ.
ದಂಡದೊಂದಿಗೆ ಅರ್ಜಿಯನ್ನು ವಜಾಗೊಳಿಸುವುದಾಗಿ ಪೀಠ ಹೇಳಿದ ನಂತರ ಅರ್ಜಿದಾರರ ವಕೀಲರು ಅರ್ಜಿಯನ್ನು ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.





