ಶ್ರೀಶೈಲದಲ್ಲಿ ನೀರಿನ ಬಾಟಲ್ ಬೆಲೆ ವಿಚಾರ: ಯಾತ್ರಾರ್ಥಿಗಳು, ಸ್ಥಳೀಯ ವ್ಯಾಪಾರಿಗಳ ನಡುವೆ ಹೊಡೆದಾಟ
ಬಾಗಲಕೋಟೆ: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀಶೈಲದಲ್ಲಿ ನೀರಿನ ಬಾಟಲ್ ಬೆಲೆ ವಿಚಾರವಾಗಿ, ಕರ್ನಾಟಕದಿಂದ ತೆರಳಿದ್ದ ಯಾತ್ರಾರ್ಥಿಗಳು ಮತ್ತು ಸ್ಥಳೀಯ ವ್ಯಾಪಾರಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
‘ಘಟನೆಯಲ್ಲಿ ಕರ್ನಾಟಕದ ಇಬ್ಬರಿಗೆ ಗಾಯಗಳಾಗಿವೆ’ ಎಂದು ಕರ್ನೂಲ್ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ಕುಮಾರ ರೆಡ್ಡಿ ಹೇಳಿದ್ದಾರೆ.
ಬುಧವಾರ ತಡರಾತ್ರಿ ವ್ಯಾಪಕ ಹಿಂಸಾಚಾರ ನಡೆದಿದೆ. ಗಲಭೆಯ ವೇಳೆ ಸ್ಥಳೀಯ ಅಂಗಡಿಗಳ ಮೇಲೂ ದಾಳಿ ನಡೆದಿದೆ. ಘರ್ಷಣೆಯಲ್ಲಿ ಕರ್ನಾಟಕ ನೋಂದಣಿಯ 200ಕ್ಕೂ ಹೆಚ್ಚು ವಾಹನಗಳನ್ನು ಜಖಂಗೊಳಿಸಲಾಗಿದೆ. ಪೊಲೀಸ್ ಬ್ಯಾರಿಕೇಡ್ಗೆ ಬೆಂಕಿ ಹಚ್ಚಲಾಗಿದೆ.
ವಾಹನಗಳಿಗೆ ಕಟ್ಟಲಾಗಿದ್ದ ಕರ್ನಾಟಕದ ಧ್ವಜ ಕಿತ್ತು ಸುಟ್ಟುಹಾಕಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಲಾಟೆ ಆರಂಭವಾದಾಗ ಬೆರಳೆಣಿಕೆಯಷ್ಟು ಪೊಲೀಸರು, ಗೃಹ ರಕ್ಷಕದಳದವರು ಸ್ಥಳದಲ್ಲಿದ್ದರು. ನಂತರ ಹೆಚ್ಚಿನ ಪೊಲೀಸರನ್ನು ಕರೆಸಲಾಯಿತು.
ಬೆಳಗಿನ ಜಾವದ ವೇಳೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. 144 ಸೆಕ್ಷನ್ ಅಡಿ ನಿಷೇಧಾಜ್ಙೆ ಜಾರಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.




