ಫರಂಗಿಪೇಟೆಯಲ್ಲಿ ಸಿ.ಎಂ ವಾಹನಕ್ಕೆ ಕಪ್ಪು ಬಾವುಟ ಪ್ರದರ್ಶಿಸಿ ಮುತ್ತಿಗೆಗೆ ಯತ್ನಿಸಿದ ಎಸ್ ಡಿ ಪಿ ಐ ಕಾರ್ಯಕರ್ತರು: GO BACK CM ಘೋಷಣೆ ಎಂದು ಘೋಷಣೆ
ಮಂಗಳೂರು: ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಪಕ್ಷದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ SDPI ಕಾರ್ಯಕರ್ತರು ಫರಂಗಿಪೇಟೆಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಮುತ್ತಿಗೆಗೆ ಯತ್ನಿಸಿದ್ದಾರೆ.
ಕೊಲೆ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸಿಎಂ ಕಾರಿಗೆ ಮುತ್ತಿಗೆಗೆ ಯತ್ನಿಸಿದರು.
ಬಂಟ್ವಾಳದ ಬಂಟರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಚಲಿಸುತ್ತಿದ್ದ ಸಿಎಂ ಕಾರಿಗೆ SDPI ಕಾರ್ಯಕರ್ತರು GO BACK CM ಘೋಷಣೆ ಕೂಗಿ ಮುತ್ತಿಗೆಗೆ ಯತ್ನಿಸಿದ್ದಾರೆ. ಕೂಡಲೇ ಮುಖ್ಯಮಂತ್ರಿ ಭದ್ರತಾ ಸಿಬ್ಬಂದಿಗಳು ಕಾರ್ಯಕರ್ತರನ್ನು ಬದಿಗೆ ಸರಿಸಿ ಹಲವರನ್ನು ವಶಕ್ಕೆ ಪಡೆದರು.
ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಬರೆದ ಡೆತ್ ನೋಟ್ ನಲ್ಲಿ ‘ನನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ’ ಎಂದು ತಿಳಿಸಿದ್ದಾರೆ. ಆದ್ದರಿಂದ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.
ಮಾತ್ರವಲ್ಲ ರಾಜ್ಯ ಬಿಜೆಪಿ ಸರಕಾರ ಅಲ್ಪಸಂಖ್ಯಾತರ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು SDPI ಕಾರ್ಯಕರ್ತರು ಆರೋಪಿಸಿದರು.




