ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ: ಕಾಂಗ್ರೆಸ್ ಮುಖಂಡರ ಬಂಧನ
ಬೆಂಗಳೂರು: ಗುತ್ತಿಗೆರ ಸಂತೋಷ್ ಪಾಟೀಲ ಆತ್ಮಹತ್ಯೆ ಗೆ ನೇರ ಕಾರಣವೆಂಬ ಆರೋಪ ಎದುರಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ರೇಸ್ ಕೋರ್ಸ್ ರಸ್ತೆಯಲ್ಲಿ ಪೊಲೀಸರು ತಡೆದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಕಾಂಗ್ರೆಸ್ ನಾಯಕರು ರ್ಯಾಲಿ ನಡೆಸಿ, ಮುಖ್ಯಮಂತ್ರಿಗೆ ನಿವಾಸದ ಕಡೆಗೆ ಕಾಲ್ನಡಿಗೆಯಲ್ಲಿ ಹೊರಟರು. ಭಾರಿ ಸಂಖ್ಯೆಯಲ್ಲಿದ್ದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ರೇಸ್ ಕೋರ್ಸ್ ರಸ್ತೆ ದಾಟಿ ಹೋಗದಂತೆ ಬ್ಯಾರಿಕೇಡ್ಗಳನ್ನು ಅಳವಡಿಸಿ ತಡೆದು ಪೊಲೀಸರು ವಶಕ್ಕೆ ಪಡೆದರು.
ರ್ಯಾಲಿಯ ವೇಳೆ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಬಿಜೆಪಿ ಮತ್ತು ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿದರು. ಭ್ರಷ್ಟ ಸರ್ಕಾರ, ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ವಾಗ್ವಾದ, ನೂಕಾಟ. ತಳ್ಳಾಟ ನಡೆಯಿತು.




