ಹುಬ್ಬಳ್ಳಿ ಗಲಭೆ ಪ್ರಕರಣ: ಎಐಎಂಐಎಂ ಪಕ್ಷದ ಸದಸ್ಯೆಯ ಪತಿ ಸೇರಿದಂತೆ 89 ಮಂದಿಯ ಬಂಧನ
ಹುಬ್ಬಳ್ಳಿ: ಯುವಕನೊಬ್ಬ ವಾಟ್ಸ್ಆ್ಯಪ್ಸ್ಟೇಟಸ್ನಲ್ಲಿ ಹಾಕಿಕೊಂಡಿದ್ದ ವಿವಾದಾತ್ಮಕ ವಿಡಿಯೊದಿಂದಾಗಿ ಶನಿವಾರ ರಾತ್ರಿ ಬಿಗುವಿನ ಸ್ಥಿತಿ ತಲೆದೋರಿದ್ದ ಹುಬ್ಬಳ್ಳಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ ಏಪ್ರಿಲ್ 20ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಘಟನೆಗೆ ಕಾರಣವಾದ ಆರೋಪಿ, ಆನಂದನಗರ ನಿವಾಸಿ ಅಭಿಷೇಕ ಹಿರೇಮಠ ಹಾಗೂ ನಂತರ ನಡೆದ ಗಲಭೆಗೆ ಸಂಬಂಧಿಸಿದಂತೆ ಪಾಲಿಕೆಯ 77ನೇ ವಾರ್ಡ್ನ ಎಐಎಂಐಎಂ ಪಕ್ಷದ ಸದಸ್ಯೆ ಹುಸೇನಬಿ ನಾಲತವಾಡ ಅವರ ಪತಿ ಇರ್ಫಾನ್ ನಾಲತವಾಡ ಸೇರಿದಂತೆ 89 ಮಂದಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಗಲಭೆಯಲ್ಲಿ 12 ಪೊಲೀಸರು ಹಾಗೂ ಇಬ್ಬರು ಗೃಹ ರಕ್ಷಕ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಲಭೆಯಲ್ಲಿ ಭಾಗಿಯಾಗಿದ್ದವರ ಪತ್ತೆಗೆ 8 ತಂಡಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




