ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಜಾಮೀನು ರದ್ದು, ವಾರದೊಳಗೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾಗೆ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ಸೋಮವಾರ (ಏಪ್ರಿಲ್ 18) ರದ್ದುಪಡಿಸಿದ್ದು, ಒಂದು ವಾರದೊಳಗೆ ಶರಣಾಗುವಂತೆ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.
ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು ಮಾಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಫೆಬ್ರುವರಿ 10ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಲಖೀಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಕುಟುಂಬ ಸದಸ್ಯರು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠ, ಅರ್ಜಿಯ ವಿಚಾರಣೆ ನಡೆಸಿ, ಹೈಕೋರ್ಟ್ ಆದೇಶ ಸಮರ್ಪಕವಾಗಿಲ್ಲ ಎಂದು ತಿಳಿಸಿದ್ದು, ಆಶಿಶ್ ಮಿಶ್ರಾ ಕುರಿತ ಪ್ರಕರಣವನ್ನು ಪುನಃ ಆರಂಭಿಸುವಂತೆ ಅಲಹಬಾದ್ ಹೈಕೋರ್ಟ್ ಗೆ ನಿರ್ದೇಶನ ನೀಡಿದೆ ಎಂದು ಎಎನ್ ಐ ವರದಿ ಮಾಡಿದೆ.




