ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಕುತ್ತಿಗೆ ಪಟ್ಟಿ ಹಿಡಿದು ವಶಕ್ಕೆ ಪಡೆದ ಸಿಐಡಿ
ಬೆಂಗಳೂರು: 542 ಪಿಎಸ್ಐ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮವು ದಿನಕ್ಕೊಂದು ತಿರುವುಗಳನ್ನು ಪಡೆದುಕೊಳ್ತಿದೆ. ಪಿಎಸ್ಐ ಅಕ್ರಮದ ಬಗ್ಗೆ ಕಾಂಗ್ರೆಸ್ ನಾಯಕರು ಧ್ವನಿ ಎತ್ತಿದ್ದರು. ಆದರೆ ಇದೀಗ ವಿಪರ್ಯಾಸ ಎಂಬಂತೆ ಕಾಂಗ್ರೆಸ್ ನಾಯಕರೇ ಈ ಪ್ರಕರಣದಲ್ಲಿ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲುತ್ತಿದ್ದಾರೆ. ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದಲ್ಲಿ ಆರೋಪಿಯಾಗಿರುವ ರುದ್ರೇಗೌಡ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಆತನ ಸಹೋದರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಂತೇಶ್ ಎಂಬವರನ್ನು ಸಿಐಡಿ ಅಧಿಕಾರಿಗಳು ಕುತ್ತಿಗೆ ಪಟ್ಟಿ ಹಿಡಿದು ಎಳೆ ತಂದಿದ್ದಾರೆ .
ಮಹಂತೇಶ್ ಸೇರಿದಂತೆ ವಿವಿಧ ಸ್ಥಳೀಯ ಕೈ ನಾಯಕರು ನಾಳೆ ಅಫಜಲಪುರದಲ್ಲಿ 61 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ನಡೆಸುವ ತಯಾರಿಯಲ್ಲಿದ್ದರು. ಈ ಕಾರ್ಯಕ್ರಮ ದ ಸಿದ್ಧತೆ ನೋಡಿಕೊಳ್ಳುತ್ತಿದ್ದ ವೇಳೆಯಲ್ಲಿ ಸಿಐಡಿ ಅಧಿಕಾರಿಗಳು ಆರೋಪಿ ಮಹಂತೇಶರನ್ನು ಬಂಧಿಸಿದ್ದಾರೆ.
ಅಜ್ಞಾತ ಸ್ಥಳದಲ್ಲಿರುವ ರುದ್ರೇಗೌಡ ಪಾಟೀಲ್ ಸಹೋದರನ ಬಂಧನದ ಬಗ್ಗೆ ಕೇಳುತ್ತಿದ್ದಂತೆಯೇ ಸಿಐಡಿ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ನನ್ನ ಸಹೋದರನನ್ನೇ ಬಂಧಿಸುತ್ತೀರಾ..? ನಿಮ್ಮನ್ನು ನೋಡಿಕೊಳ್ತೇನೆ ಎಂದು ಆವಾಜ್ ಹಾಕಿದ್ದಾನೆ ಎನ್ನಲಾಗಿದೆ.
ಇನ್ನು ಈ ಪ್ರಕರಣದ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಈ ಹಗರಣವನ್ನು ಮೊದಲು ಬಯಲಿಗೆಳೆದಿದ್ದು ಕಾಂಗ್ರೆಸ್, ಪ್ರಿಯಾಂಕ್ ಖರ್ಗೆ 52 ಸಾವಿರ ಮಂದಿ ಪಿಎಸ್ಐ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗಾದ ಅನ್ಯಾಯದ ಬಗ್ಗೆ ಧ್ವನಿ ಎತ್ತಿದ್ದರು. ಬಿಜೆಪಿ ಸರ್ಕಾರ ಎಲ್ಲಾ ರೀತಿಯಿಂದಲೂ ಭ್ರಷ್ಟಾಚಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.





