ಮಂಗಳೂರು: ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ: ಬಜ್ಪೆ ಠಾಣೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ ಮತ್ತು ಮೂವರು ಪೊಲೀಸ್ ಸಿಬ್ಬಂದಿಗಳ ಅಮಾನತು
ಮಂಗಳೂರು: ಪ್ರಕರಣ ಒಂದಕ್ಕೆ ಸಂಬಂಧಿಸಿ ಹಿಂದು ಸಂಘಟನೆಯ ಮೂವರು ಕಾರ್ಯಕರ್ತರನ್ನು ಪೊಲೀಸ್ ಠಾಣೆಗೆ ಕರೆಸಿ ಹಲ್ಲೆ ನಡೆಸಿದ ವಿಚಾರದಲ್ಲಿ ಬಜ್ಪೆ ಠಾಣೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ ಮತ್ತು ಮೂವರು ಪೊಲೀಸ್ ಸಿಬಂದಿಯನ್ನು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅಮಾನತು ಮಾಡಿ ಆದೇಶ ಮಾಡಿದ್ದಾರೆ.
ಕಟೀಲು ಪರಿಸರದ ಶ್ರೀರಾಮ ಸೇನೆಯ ಕಾರ್ಯಕರ್ತರು ಎನ್ನಲಾದ ಮಹೇಶ್, ದುರ್ಗಾಚರಣ್ ಮತ್ತು ದೀಪಕ್ ಎಂಬ ಮೂವರು ಯುವಕರ ಮೇಲೆ ಬಜ್ಪೆ ಠಾಣೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಲಾಗಿತ್ತು. ಎ.22ರಂದು ಘಟನೆ ನಡೆದಿದ್ದು, ಈ ಮೂವರಲ್ಲಿ ಇಬ್ಬರು ವೆನ್ಲಾಕ್ ಆಸ್ಪತ್ರೆಯಲ್ಲಿ ಮತ್ತು ಇನ್ನೊಬ್ಬ ಯುವಕ ಕಟೀಲಿನ ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಗೆ ಠಾಣೆಯಲ್ಲಿ ಕೂಡಿಹಾಕಿ ಗಂಭೀರ ಹಲ್ಲೆ ನಡೆಸಲಾಗಿದೆ ಎಂದು ಮೇಲಧಿಕಾರಿಗಳಿಗೆ ದೂರು ನೀಡಿದ್ದರಿಂದ ಉತ್ತರ ವಿಭಾಗದ ಎಸಿಪಿ ಮಹೇಶ್ ಕುಮಾರ್ ತನಿಖೆ ನಡೆಸಿ ವರದಿ ನೀಡಿದ್ದರು. ಅದನ್ನು ಆಧರಿಸಿ, ಇನ್ಸ್ ಪೆಕ್ಟರ್ ಸೇರಿ ನಾಲ್ವರನ್ನು ಇಲಾಖಾ ತನಿಖೆ ಬಾಕಿಯಿರಿಸಿ ಅಮಾನತು ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹೊಣೆ ವಹಿಸಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.





