ಮೈ ಶುಗರ್ ಕಾರ್ಖಾನೆ ಬಳಿ ಕಾಂಗ್ರೆಸ್ ನಿಂದ ಪ್ರತಿಭಟನೆ: ಮೊಹಮ್ಮದ್ ನಲಪಾಡ್ ಸೇರಿ ಹಲವರ ಬಂಧನ
ಮಂಡ್ಯ: ಮೈಷುಗರ್ ಗೆ ಪ್ರವೇಶಿಸಿ ಸ್ವಚ್ಛತಾ ಕಾರ್ಯಕ್ಕೆ ಮುಂದಾದಂತ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಕಾರ್ಖಾನೆ ಮುಂದೆ ಪೊಲೀಸರು ತಡೆದಿದ್ದಾರೆ. ಅಲ್ಲದೇ ಒಳ ನುಗ್ಗಲು ಯತ್ನಿಸಿದಂತ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ನಗರದ ಫ್ಯಾಕ್ಟರಿ ಸರ್ಕಲ್ ನಿಂದ ಮೆರವಣಿಗೆ ಮೂಲಕ ಯುವ ಕಾಂಗ್ರೆಸ್ ಮುಖಂಡರು ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ, ಮೈ ಶುಗರ್ ಕಾರ್ಖಾನೆಗೆ ತೆರಳಿ ಸ್ವಚ್ಛತಾ ಕಾರ್ಯದಲ್ಲಿ ಮುಂದಾದರು. ನೂರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ತೆರಳಿ ಸ್ವಚ್ಛತಾ ಕಾರ್ಯಕ್ಕೆ ಯತ್ನಿಸಲಾಯಿತು. ಒಳ ಪ್ರವೇಶಿಸಲು ಯತ್ನಿಸಿದಂತ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರೀಸ್ ನಲಪಾಡ್ ಸೇರಿದಂತೆ ಹಲವು ಕಾರ್ಯಕರ್ತರನ್ನು ಯತ್ನಿಸಿದರು.
ಕಾರ್ಖಾನೆ ಸ್ವಚ್ಛತೆಗೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದು, ಈ ವೇಳೆ ಕಾರ್ಖಾನೆ ಪ್ರವೇಶಕ್ಕೆ ಗೇಟ್ ತೆರೆಯಲು ಮುಂದಾಗುತ್ತಿದ್ದಂತೆ ಅವಕಾಶ ನೀಡದ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ತಡೆದಿದ್ದಾರೆ.
ಇನ್ನು ಫ್ಯಾಕ್ಟರಿ ಎದುರು ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕಾರ್ಖಾನೆ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಕುಳಿತುಕೊಳ್ಳಲು ಮುಂದಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ನಲಪಾಡ್ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.




