ಶರದ್ ಪವಾರ್ ವಿರುದ್ಧ ಮಾತನಾಡಿದ್ದಕ್ಕೆ ಬಿಜೆಪಿ ನಾಯಕನಿಗೆ ಕಪಾಳ ಮೋಕ್ಷ
ಮುಂಬೈ: ನ್ಯಾಷನಲಿಷ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಮುಖ್ಯಸ್ಥ ಹಾಗೂ ಹಿರಿಯ ರಾಜಕಾರಣಿ ಶರದ್ ಪವಾರ್ ವಿರುದ್ಧ ಮಾತನಾಡಿದ್ದಕ್ಕೆ ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕರ್ ಅಂಬೇಕರ್ಗೆ ಎನ್ಸಿಪಿ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ.
ಬಿಜೆಪಿ ನಾಯಕನ ಮೇಲೆ ಎನ್ಸಿಪಿ ಕಾರ್ಯಕರ್ತರು ಕೈ ಮಾಡಿದ ವಿಡಿಯೋವನ್ನು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ತಮ್ಮ ಟ್ವಿಟರ್ನಲ್ಲಿ ಪೋಸ್ಟ್ ಮಾಡಿ ಖಂಡಿಸಿದ್ದಾರೆ.
ಮಹಾರಾಷ್ಟ್ರ ಪ್ರದೇಶ ಭಾರತೀಯ ಜನತಾ ಪಕ್ಷದ ವಕ್ತಾರ ವಿನಾಯಕ್ ಅಂಬೇಕರ್ ಮೇಲೆ ಎನ್ಸಿಪಿ ಗೂಂಡಾಗಳು ದಾಳಿ ಮಾಡಿದ್ದಾರೆ. ಬಿಜೆಪಿ ಪರವಾಗಿ ನಾನು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ಈ ಗೂಂಡಾಗಳನ್ನು ತಕ್ಷಣ ಬಂಧಿಸಬೇಕು ಎಂದು ಟ್ವೀಟ್ ಮೂಲಕ ಚಂದ್ರಕಾಂತ್ ಪಾಟೀಲ್ ಆಗ್ರಹಿಸಿದ್ದಾರೆ.
ಎನ್ಸಿಪಿಯ ಕೆಲ ಕಾರ್ಯಕರ್ತರು ಮೇಜಿನ ಬಳಿ ಕುಳಿತಿರುವ ಅಂಬೇಕರ್ ಅವರೊಂದಿಗೆ ವಾಗ್ವಾದ ನಡೆಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಇದರ ಮಧ್ಯೆ ವ್ಯಕ್ತಿಯೊಬ್ಬ ಅವರಿಗೆ ಕಪಾಳಮೋಕ್ಷ ಮಾಡಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆ ಆರಂಭವಾಗಿದೆ.




