ಕರ್ಣಾಟಕ ರಾಜ್ಯಸಭಾ ಚುನಾವಣೆ: ಬಿಜೆಪಿ ಯಿಂದ ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಗೆ ಟಿಕೆಟ್
ಬೆಂಗಳೂರು: ಕರ್ನಾಟಕದ ಎರಡು ರಾಜ್ಯಸಭಾ ಸ್ಥಾನಗಳ ಸಹಿತ 9 ರಾಜ್ಯಗಳ 16 ಸ್ಥಾನಗಳಿಗೆ ಬಿಜೆಪಿಯಿಂದ ರಾಜ್ಯಸಭಾ ಚುನಾವಣೆಗಾಗಿ ಟಿಕೆಟ್ ಘೋಷಣೆ ಮಾಡಲಾಗಿದೆ. ಕರ್ನಾಟಕ ರಾಜ್ಯಸಭಾ ಚುನಾವಣೆಯ ನಾಲ್ಕು ಸ್ಥಾನಗಳಿಗೆ ಘೋಷಣೆಯಾಗಿದ್ದಂತ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ನಟ ಜಗ್ಗೇಶ್ ಹಾಗೂ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ.


ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿದ್ದ ತುರುವೇಕೆರೆ ಮಾಜಿ ಶಾಸಕ ಜಗ್ಗೇಶ್ ಅವರು ವಿಧಾನ ಪರಿಷತ್ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ಇದೀಗ ಅಚ್ಚರಿಯ ಬೆಳವಣಿಗೆಯಲ್ಲಿ ನಟ ಜಗ್ಗೇಶ್ ಅವರಿಗೆ ಬಿಜೆಪಿ ರಾಜ್ಯಸಭೆ ಟಿಕೆಟ್ ನೀಡಿದೆ.
ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಬಂದಿದ್ದ ಕೆ.ಸಿ. ರಾಮಮೂರ್ತಿ ಅವರಿಗೂ ಈ ಬಾರಿ ಬಿಜೆಪಿ ಟಿಕೆಟ್ ನೀಡಿಲ್ಲ. ಆದರೆ ಒಕ್ಕಲಿಗ ಸಮುದಾಯವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಜಗ್ಗೇಶ್ ಅವರ ಹೆಸರನ್ನು ಪರಿಗಣನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.




