ನನಗೆ ಮಾತ್ರವಲ್ಲ, ಪ್ರತಿಯೊಬ್ಬ ಭಾರತೀಯನಿಗೂ ಆರೆಸ್ಸೆಸ್ ಕಂಡರೆ ಭಯ ಇದೆ: ಸಿದ್ದರಾಮಯ್ಯ
ಬೆಂಗಳೂರು: ಸಂಸದ ಡಿ.ವಿ.ಸದಾನಂದಗೌಡ ಅವರು ಹೇಳಿರುವಂತೆ ಆರ್ಎಸ್ಎಸ್ ಕಂಡರೆ ನನಗೆ ಭಯ ಎಂಬುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ, ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರ್ಎಸ್ಎಸ್ ಕಂಡರೆ ಭಯ ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಡಿ.ವಿ.ಸದಾನಂದಗೌಡ ಅವರ ಹೇಳಿಕೆಯ ‘ಆರ್ಎಸ್ಎಸ್ ಕಂಡರೆ ಸಿಗ್ಗರಾಮಯ್ಯಗೆ ಭಯ’ ಎಂಬ ‘ಪ್ರಜಾವಾಣಿ’ ವರದಿಯನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ ಸರಣಿ ಟ್ವೀಟ್ಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ. ಆರ್ಯರ ಆರ್ಎಸ್ಎಸ್ ಎಂಬ ಹ್ಯಾಶ್ಟ್ಯಾಗ್ನಲ್ಲಿ ಟ್ವೀಟ್ ಮಾಡಿದ್ದಾರೆ.
ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. ಡಿ.ವಿ.ಸದಾನಂದಗೌಡ ಅವರು ಯಾಕೆ ತನ್ನ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಆರ್ಎಸ್ಎಸ್ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ ಆರ್ಎಸ್ಎಸ್ ಮೇಲೆ ದೇಶದ ಮೊದಲ ಗೃಹ ಸಚಿವ ವಲ್ಲಭಭಾಯಿ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ ಎಂದು ಸಿದ್ದರಾಮಯ್ಯ ಇತಿಹಾಸವನ್ನು ಉಲ್ಲೇಖಿಸಿದ್ದಾರೆ.




