ಉಪ್ಪಿನಂಗಡಿ: 2.50 ಲಕ್ಷ ರೂ. ಮೊತ್ತದ ಚಿನ್ನಾಭರಣ ಕಳವು ಪ್ರಕರಣ: ಆರೋಪಿಯ ಬಂಧನ
ಉಪ್ಪಿನಂಗಡಿ: ಮೇ.16 ರಂದು ಮನೆಗೆ ಬೆಂಕಿ ಬಿದ್ದ ಪ್ರಕರಣದಲ್ಲಿ ಮನೆಯ ಕಪಾಟಿನಲ್ಲಿದ್ದ 2.50 ಲಕ್ಷ ರೂ. ಮೊತ್ತದ ಚಿನ್ನಾಭರಣ ಕಳವಿಗೀಡಾದ ಕೃತ್ಯಕ್ಕೆ ಸಂಬಂಧಿಸಿದಂತೆ ಕಳವು ನಡೆಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಮಲೆಂಗಲ್ ಎಂಬಲ್ಲಿನ ಆನಂದ ಮೂಲ್ಯ ಎಂಬವರ ಮನೆಗೆ ಮೇ.16 ರಂದು ಬೆಂಕಿ ತಗುಲಿದ್ದು, ಸ್ಥಳೀಯರು ಸಕಾಲಿಕ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದರು.
ಆದರೆ ಆ ವೇಳೆಗಾಗಲೇ ಮನೆಯಲ್ಲಿದ್ದ ಬಟ್ಟೆ ಬರೆ, ಕ್ಯಾಮರಾದ ಪರಿಕರಗಳು ಸುಟ್ಟು ಹೋಗಿದ್ದು, ಕಪಾಟಿನಲ್ಲಿದ್ದ ಚಿನ್ನ ಇಡುವ ಬಾಕ್ಸ್ ಮತ್ತು ದಾಖಲೆ ಪತ್ರಗಳು ಯಥಾ ಸ್ಥಿತಿಯಲ್ಲಿದ್ದವು.
ಈ ಬಗ್ಗೆ ಸಮಾಧಾನ ಹೊಂದಿದ್ದ ಅವರು, ಮೇ.30 ರಂದು ಎಲ್ಲಾ ವಸ್ತುಗಳನ್ನು ಒಪ್ಪವಾಗಿ ಜೋಡಿಸಿ ಇಡುವಾಗ ಚಿನ್ನ ಇಡುವ ಬಾಕ್ಸ್ ನೊಳಗಿದ್ದ ವಿವಿಧ ಆಭರಣಗಳು ಸೇರಿದಂತೆ ಒಟ್ಟು 2.50 ಲಕ್ಷ ಮೌಲ್ಯದ ಚಿನ್ನಾಭರಣವು ಕಳವಾಗಿರುವುದು ಕಂಡು ಬಂದಿತ್ತು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ವಿಳಂಬವಾಗಿ ದೂರು ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಅಂದು ಬೆಂಕಿ ನಂದಿಸಿ ಅಪದ್ಭಾಂಧವರೆನಿಸಿದ್ದ ಮಂದಿಯನ್ನೇ ವಿಚಾರಣೆಗೆ ಒಳಪಡಿಸಿದಾಗ ಸ್ಥಳೀಯ ಬಾರ್ ಉದ್ಯೋಗಿ, ಗುರುವಾಯನಕೆರೆ ನಿವಾಸಿ ಶಿವಪ್ರಸಾದ್ (38) ತಾನು ಚಿನ್ನಾಭರಣವನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದು, ಪೊಲೀಸರು ಎಲ್ಲಾ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಕಿ ನಂದಿಸಲು ಹೋದಾಗ ಮನೆ ಮಂದಿ ಇಲ್ಲದ ಮನೆಯೊಳಗೆ ಚಿನ್ನಾಭರಣದ ಪೆಟ್ಟಿಗೆ ನೋಡಿ ಅದನ್ನು ಎಗರಿಸಿರುವುದಾಗಿ ಆರೋಪಿಯು ಒಪ್ಪಿಕೊಂಡಿರುತ್ತಾನೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.




