ಇ.ಡಿ ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ಪ್ರತಿಭಟನೆ: ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಸೇರಿ ಹಲವು ನಾಯಕರ ಬಂಧನ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಸೇರಿ ಹಲವು ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜಾರಿ ನಿರ್ದೇಶನಾಲಯದ ಸೂಚನೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರು ಇಂದು 2ನೇ ದಿನದ ವಿಚಾರಣೆಗೆ ಹಾಜರಾಗಿದ್ದು, ಈ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.
ತೀವ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ರಣದೀಪ್ ಸುರ್ಜೇವಾಲಾ, ಲೋಕಸಭೆ ಸಂಸದ ಮಾಣಿಕಂ ಟಾಗೋರ್, ಪಿ.ಎಲ್.ಪೂನಿಯಾ ಸೇರಿದಂತೆ ಹಲವರನ್ನು ಪಕ್ಷದ ಪ್ರಧಾನ ಕಚೇರಿ ಎದುರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಈ ವೇಳೆ ಚಲಿಸುತ್ತಿರುವ ಬಸ್ನಿಂದಲೇ ವಿಡಿಯೊ ಮಾಡಿರುವ ಟಾಗೋರ್, ‘ಪೊಲೀಸರು ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗುತ್ತಿದೆ. ಅಮಿತ್ ಶಾ ಅವರ ಶಕ್ತಿ ನಮ್ಮನ್ನು ತಡೆಯಲಾಗದು’ ಎಂದು ಹೇಳಿದ್ದಾರೆ.