February 2, 2026

ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆ ಫಲಿತಾಂಶ: ಬಿಜೆಪಿ, ಕಾಂಗ್ರೆಸ್‌ ತಲಾ ಎರಡು ಸ್ಥಾನಗಳಲ್ಲಿ ಗೆಲುವು, ಜೆಡಿಎಸ್‌ ಶೂನ್ಯ ಸಾಧನೆ

0
image_editor_output_image-78235145-1655367191575.jpg

ಬೆಂಗಳೂರು: ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆ ಫಲಿತಾಂಶ ಘೋಷಣೆಯಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ತಲಾ ಎರಡು ಸ್ಥಾನಗಳಲ್ಲಿ ಗೆಲುವು ಕಂಡಿದ್ದು ಜೆಡಿಎಸ್‌ ಪಕ್ಷ ನೆಲಕಚ್ಚಿದೆ.

ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಸವರಾಜ ಹೊರಟ್ಟಿ ಅವರು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ತೊರೆದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸವರಾಜ ಹೊರಟ್ಟಿ ಎಂಟನೇ ಬಾರಿ ವಿಜಯ ಸಾಧಿಸಿ ದಾಖಲೆ ಬರೆದಿದ್ದಾರೆ.

ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಕಾಶ್ ಹುಕ್ಕೇರಿ ಜಯ ಗಳಿಸಿದ್ದಾರೆ. ಈ ಹಿಂದೆ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಬಿಜೆಪಿಯ ಅರುಣ ಶಹಾಪುರ ಸೋಲನುಭವಿಸಿದ್ದಾರೆ.

ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹಣಮಂತ ನಿರಾಣಿ ಜಯ ಗಳಿಸಿದ್ದಾರೆ. ಅವರು 34,693 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದರು. ಅವರು ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಸುನೀಲ ಸಂಕ ಅವರನ್ನು ಸೋಲಿಸಿದರು.

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮಧು ಜಿ.ಮಾದೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ.ಇದರೊಂದಿಗೆ ಕ್ಷೇತ್ರದಲ್ಲಿ ಇದೇ‌ ಮೊದಲ ಬಾರಿಗೆ ಕಾಂಗ್ರೆಸ್‌ ಗೆಲುವಿನ ಖಾತೆ ತೆರೆದಿದೆ. ಮಧು, ಬಿಜೆಪಿಯ ಮೈ.ವಿ. ರವಿಶಂಕರ್ ಅವರನ್ನು ಸೋಲಿಸಿದರು.

ಈ ನಾಲ್ಕು ಕ್ಷೇತ್ರಗಳ ಪೈಕಿ ಜೆಡಿಎಸ್‌ ಪಕ್ಷ ಯಾವ ಕ್ಷೇತ್ರದಲ್ಲೂ ಗೆಲುವು ದಾಖಲಿಸಿಲ್ಲ. ನಿನ್ನೆ (ಬುಧವಾರ) ಆರಂಭವಾದ ಮತ ಎಣಿಕೆ ಗುರುವಾರ ಮಧ್ಯಾಹ್ನ ಮುಕ್ತಾಯವಾಯಿತು.

Leave a Reply

Your email address will not be published. Required fields are marked *

error: Content is protected !!