ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ ಪ್ರಕರಣ: ಆರೋಪಿಗೆ ಗುಂಡು ಹೊಡೆದು ಬಂಧನ
ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಕಾಲಿಗೆ, ಮಂಗಳವಾರ ನಸುಕಿನಲ್ಲಿ ಗುಂಡು ಹೊಡೆದು ಬಂಧಿಸಲಾಗಿದೆ.
ರಾಜು ದೊಡ್ಡಬೊಮ್ಮನವರ ಎಂಬ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆಯ ಆರೋಪ ಹೊತ್ತಿರುವ ವಿಶಾಲಸಿಂಗ್ ಚವ್ಹಾಣ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ತಿಂಗಳ ಹಿಂದೆ ಕೊಲೆ ನಡೆದಿದ್ದು, ಆರೋಪಿ ತಲೆ ಮರೆಸಿಕೊಂಡಿದ್ದರು. ಇಲ್ಲಿನ ವೀರಭದ್ರ ನಗರದ ಮನೆಯೊಂದರಲ್ಲಿ ಸೋಮವಾರ ರಾತ್ರಿ ಬಂದು ಅವಿತು ಕುಳಿತ ಬಗ್ಗೆ ಮಾಹಿತಿ ಸಿಕ್ಕಿತ್ತು. ನಸುಕಿನ 5ರ ಸುಮಾರಿಗೆ ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ. ಈ ವೇಳೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸರು ತಿಳಿಸಿದ್ದಾರೆ.
ಎಸಿಪಿ ನಾರಾಯಣ ಭರಮನಿ ಅವರು ಹೊಡೆದ ಗುಂಡು ಆರೋಪಿ ಕಾಲಿಗೆ ಬಿದ್ದಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.




