ಕುಂದಾಪುರ: ಯುವತಿಯ ಅತ್ಯಾಚಾರ ಪ್ರಕರಣ, ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ, ದಂಡ
ಕುಂದಾಪುರ: ವಿವಾಹವಾಗುವುದಾಗಿ ನಂಬಿಸಿ, ಅತ್ಯಾಚಾರ ಎಸಗಿ, ಮಗುವಿಗೆ ಜನ್ಮ ನೀಡಿದ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಣೇಶ್ ಶೆಟ್ಟಿ (35) ಅಪರಾಧಿಯೆಂದು ಸಾಬೀತಾಗಿದ್ದು, ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿನ ಶಿಕ್ಷೆ ವಿಧಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್ ಅವರು, ಅಪರಾಧಿ ಕೆರಾಡಿಯ ನಿವಾಸಿ ಗಣೇಶ್ ಶೆಟ್ಟಿಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ 10 ವರ್ಷಗಳ ಕಠಿನ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ, ಮೋಸ ಮಾಡಿ ವಂಚಿಸಿದ್ದಕ್ಕೆ 1 ವರ್ಷ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದ್ದಾರೆ.
ಸಂತ್ರಸ್ತೆ ಕಾನೂನು ಸೇವಾ ಪ್ರಾಧಿಕಾರದ ಮೂಲಕ ನೆರವನ್ನು ಪಡೆದುಕೊಳ್ಳಬಹುದು. ಸಂತ್ರಸ್ತೆ ಪರ ಕುಂದಾಪುರದ ಪಬ್ಲಿಕ್ ಪ್ರಾಸಿಕ್ಯೂಟರ್ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು.




