ಉಡುಪಿ: ವಿಶಾಲ ಗಾಣಿಗ ಕೊಲೆ ಪ್ರಕರಣ:
ವರ್ಷದ ನಂತರ ಸುಪಾರಿ ಹಂತಕ ಪೊಲೀಸರ ವಶಕ್ಕೆ
ಉಡುಪಿ: ಬ್ರಹ್ಮಾವರ ತಾಲೂಕಿನಲ್ಲಿ 2021ರಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣ ನಡೆದ ಒಂದು ವರ್ಷದ ನಂತರ ಸುಪಾರಿ ಹಂತಕನನ್ನು ಉಡುಪಿ ಪೊಲೀಸರು ಉತ್ತರಪ್ರದೇಶದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರೋಹಿತ್ ರಾಣಾ ಪ್ರತಾಪ್ ನಿಶಾದ್ ಯಾನೆ ಸೋನು (21) ಎಂದು ಗುರುತಿಸಲಾಗಿದೆ.
ಘಟನೆ ವಿವರ:
2021ರ ಜು.12 ರಂದು ಬ್ರಹ್ಮಾವರ ಕುಮ್ರಗೊಡು ಗ್ರಾಮದ ರೆಸಿಡೆನ್ಸಿಯಲ್ಲಿ ಒಬ್ಬಂಟಿಯಾಗಿದ್ದ ವಿಶಾಲ ಗಾಣಿಗರವರನ್ನು ಭೀಕರವಾಗಿ ಕೊಲೆ ಮಾಡಿ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಮಂಗಳ ಸೂತ್ರ ಹಾಗೂ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ಸುಲಿಗೆ ಮಾಡಲಾಗಿತ್ತು.
ಘಟನೆ ಬಗ್ಗೆ ಈಕೆಯ ಪತಿ ರಾಮಕೃಷ್ಣ ಗಾಣಿಗನನ್ನು ವಿಚಾರಿಸಿದಾಗ ಪತ್ನಿಯ ಕೊಲೆಗೆ ಆತ ಸುಪಾರಿ ನೀಡಿದ್ದ ಎಂಬ ಅಂಶ ಬಯಲಾಗಿತ್ತು. ಪ್ರಕರಣ ಸಂಬಂಧ ಈಗಾಗಲೇ ರಾಮಕೃಷ್ಣ ಗಾಣಿಗ ಹಾಗೂ ಓರ್ವ ಸುಪಾರಿ ಹಂತಕ ಉತ್ತರ ಪ್ರದೇಶದ ಗೋರಖ್ಪುರದ ಸ್ವಾಮಿನಾಥ ನಿಶಾದನನ್ನು ಈಗಾಗಲೇ ಉಡುಪಿ ಪೊಲೀಸರು ಬಂಧಿಸಿದ್ದರು.
ಸದ್ಯ ಆರೋಪಿಗಳು ಹಿರಿಯಡ್ಕ ಜೈಲಿನಲ್ಲಿದ್ದಾರೆ. ಇವರ ವಿರುದ್ಧ ಈಗಾಗಲೇ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಇದೇ ಪ್ರಕರಣದಲ್ಲಿ ಮತ್ತೋರ್ವ ಸುಪಾರಿ ಹಂತಕ ರೋಹಿತ್ ರಾಣಾ ಪ್ರತಾಪ್ ತಲೆಮರೆಸಿಕೊಂಡಿದ್ದನು. ಈತ ನಾಪತ್ತೆ ಬಗ್ಗೆ ಆರೋಪಿಯ ಪೋಷಕರು ಮುಂಬೈಯ ಗಾಮ್ದೇವಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಕೊಲೆ ಪ್ರಕರಣದ ನಂತರ ಹಲವು ತಿಂಗಳು ಆರೋಪಿ ನೇಪಾಳ ಗಡಿಯಲ್ಲಿನ ಮಹಾರಾಜ ಗಂಜ್ ಎಂಬ ಪರಿಸರದಲ್ಲಿ ತಲೆ ಮರೆಸಿಕೊಂಡು ಓಡಾಡುತ್ತಿದ್ದನು.
ಕೆಲದಿನಗಳ ಹಿಂದೆ ಈತ ಉತ್ತರ ಪ್ರದೇಶದ ಗೋರಖ್ಪುರದಲ್ಲಿದ್ದ ಬಗ್ಗೆ ಮಾಹಿತಿ ಪಡೆದ ತನಿಖಾಧಿಕಾರಿ ಅನಂತಪದ್ಮನಾಭ ನೇತೃತ್ವದಲ್ಲಿ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಗುರುನಾಥ ಹಾದಿಮನಿ, ಸಿಬ್ಬಂದಿ ವೆಂಕಟರಮಣ ದೇವಾಡಿಗ, ರಾಘವೇಂದ್ರ, ಪ್ರವೀಣ್ ಶೆಟ್ಟಿಗಾರ್ ರವರನ್ನು ಒಳಗೊಂಡ ವಿಶೇಷ ತಂಡವು ಬಂಧಿಸಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಎನ್, ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್ .ಟಿ ಸಿದ್ದಲಿಂಗಪ್ಪರವರ ಮಾರ್ಗದರ್ಶನದಂತೆ, ಸುಧಾಕರ ಎಸ್ ನಾಯ್ಕ, ಪೊಲೀಸ್ ಉಪಾಧೀಕ್ಷಕರು, ಉಡುಪಿ ಉಪ ವಿಭಾಗರವರ ನಿರ್ದೇಶನದಂತೆ ಕೋಟ ಠಾಣೆಯ ಸಿಬ್ಬಂದಿ ರಾಘವೇಂದ್ರ, ವಿಜಯೇಂದ್ರ ಹಾಗೂ ಬ್ರಹ್ಮಾವರ ವೃತ್ತ ಕಛೇರಿಯ ಸಿಬ್ಬಂದಿ ಕೃಷ್ಣಪ್ಪ, ವಾಸುದೇವ ಪೂಜಾರಿ, ಪ್ರದೀಪ್ ನಾಯಕ್, ಕೃಷ್ಣ ಶೇರುಗಾರ್, ಶೇಖರ ಶೇರುಗಾರ್, ಜ್ಯೋತಿ ಎಂ, ನಾಗಶ್ರೀ ಹೆಚ್.ಪಿ. ರವರು ಪ್ರಕರಣವನ್ನು ಭೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಅಕ್ರಮ ಸಂಬಂಧಕ್ಕಾಗಿ ಕೊಲೆ:
ವಿಶಾಲ ಗಾಣಿಗ ಹತ್ಯೆಗೆ ಪತಿ ರಾಮಕೃಷ್ಣನಿಗೆ ಇದ್ದ ಅಕ್ರಮ ಸಂಬಂಧವೇ ಕಾರಣ ಎಂದು ತನಿಖೆ ವೇಳೆ ತಿಳಿದು ಬಂದಿತ್ತು. ರಾಮಕೃಷ್ಣನ ಅಕ್ರಮ ಸಂಬಂಧದಿಂದ ಗಂಡ ಹೆಂಡತಿ ಮಧ್ಯೆ ಆಗಾಗ ಜಗಳ ಕೂಡ ನಡೆಯುತ್ತಿತ್ತು. ಅಲ್ಲದೇ ಆಸ್ತಿ ವಿಚಾರದಲ್ಲೂ ಗಲಾಟೆ ಆಗುತ್ತಲೇ ಇತ್ತು. ಇದೇ ದ್ವೇಷದಿಂದ ಹಂತಕರಿಗೆ 2 ಲಕ್ಷಕ್ಕೂ ಅಧಿಕ ಹಣ ನೀಡಿ ಸುಪಾರಿ ನೀಡಿ ಪತ್ನಿಯನ್ನು ಕೊಲೆ ಮಾಡಿಸಿದ್ದಾನೆ ಅಂತಾ ತಿಳಿದುಬಂದಿದೆ.




