ಚಿಂತಕ, ಸಾಮಾಜಿಕ ಹೋರಾಟಗಾರ ಜಿ.ರಾಜಶೇಖರ್ ನಿಧನ
ಉಡುಪಿ: ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ಜಿ.ರಾಜಶೇಖರ ಬುಧವಾರ ನಗರದ ಆದರ್ಶ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಜಿ.ರಾಜಶೇಖರ ಅವರಿಗೆ ಹಲವು ದಿನಗಳಿಂದ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ದಿನದಿಂದ ದಿನಕ್ಕೆ ಆರೋಗ್ಯ ಸ್ಥಿತಿ ಬಿಗಡಾಯಿಸುತ್ತಲೇ ಇತ್ತು. ಕೊನೆಗೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು.
ಪ್ರಮುಖ ಸಾಮಾಜಿಕ ಹೋರಾಟಗಾರು ಹಾಗೂ ಚಿಂತಕರಾಗಿದ್ದ ಜಿ.ರಾಜಶೇಖರ ಜನಪರ ಚಳವಳಿಗಳನ್ನು ರೂಪಿಸುವಲ್ಲಿ ಮುಂಚೂಣಿಯಲ್ಲಿದ್ದರು. ಕರಾವಳಿಯ ಕೋಮುವಾದದ ವಿರುದ್ಧ ಗಟ್ಟಿಯಾಗಿ ಧನಿ ಎತ್ತುತ್ತಿದ್ದರು.
ನೇರ ನಡೆ ನುಡಿಗೆ ಹೆಸರಾಗಿದ್ದ ಅವರು ಜೀವನದುದ್ದಕ್ಕೂ ಸರಳ ವ್ಯಕ್ತಿತ್ವ ಹಾಗೂ ಆಡಂಬರವಿಲ್ಲದ ಜೀವನ ಶೈಲಿ ಪಾಲಿಸಿದವರು.
ಜಿ.ರಾಜಶೇಖರ ಅವರ ಪಾರ್ಥಿವ ಶರೀರವನ್ನು ಗುರುವಾರ ಬೆಳಿಗ್ಗೆ 8 ಗಂಟೆಗೆ ನಗರದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣ ಸಮೀಪದಲ್ಲಿರುವ ಸಂಬಂಧಿಕರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಹತ್ತು ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.




