ಪ್ರವೀಣ್ ಹತ್ಯೆ : ಮೂವರು ಪ್ರಮುಖ ಹಂತಕರು ಕೇರಳದಲ್ಲಿ ಅರೆಸ್ಟ್ – ಮಧ್ಯಾಹ್ನ 12.30 ಗಂಟೆಗೆ ಸುದ್ದಿಗೋಷ್ಠಿ ಕರೆದ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಬೆಳ್ಳಾರೆ : ದ.ಕ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಕಡೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದಲ್ಲಿ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದು, ಶಿಯಾಬ್, ಬಶೀರ್, ರಿಯಾಝ್ ಬಂಧಿತ ಆರೋಪಿಗಳು. ಜುಲೈ ೨೬ ರಂದು ಪ್ರವೀಣ್ ಹತ್ಯೆಗೈದು ಕೇರಳಕ್ಕೆ ಪರಾರಿಯಾಗಿದ್ದರು, ಇದೀಗ ಆರೋಪಿಗಳನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ಪೊಲೀಸರು ಗೌಪ್ಯ ಸ್ಥಳದಲ್ಲಿರಿಸಿ ಆರೋಪಿಗಳನ್ನು ವಿಚಾರಣೆ ಮಾಡುತ್ತಿದ್ದಾರೆ.
ಜುಲೈ ೨೬ ರಂದು ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ನಡೆದಿತ್ತು. ಪ್ರಮುಖ ಆರೋಪಿಗಳಿಗೆ ಸಹಕಾರ ನೀಡಿದ ೭ ಜನರನ್ನು ಪೊಲೀಸರು ಈ ಹಿಂದೆ ಬಂಧಿಸಿದ್ದಾರೆ. ಆದರೆ ಪ್ರಮುಖ ಹಂತಕರನ್ನು ಬಂಧಿಸುವುದು ಪೊಲೀಸರಿಗೆ ಕಗ್ಗಂಟಾಗಿತ್ತು. ಇದೀಗ ಪ್ರಮುಖ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ . ಇಂದು (ಆಗಸ್ಟ್ 11) ಮಧ್ಯಾಹ್ನ ೧೨ ಗಂಟೆಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸುದ್ದಿಗೋಷ್ಠಿ ನಡೆಸಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ.





