ಕರ್ನಾಟಕ ಸುಗಮ ಸಂಗೀತದ ಪ್ರಸಿದ್ದ ಗಾಯಕರಾಗಿದ್ದ ಶಿವಮೊಗ್ಗ ಸುಬ್ಬಣ್ಣ ನಿಧನ
ಬೆಂಗಳೂರು: ಕರ್ನಾಟಕ ಸುಗಮ ಸಂಗೀತದ ಪ್ರಸಿದ್ದ ಗಾಯಕರಾಗಿದ್ದ, ತಮ್ಮ ಮೋಹಕ ಕಂಠದಿಂದ ನಾಡಿನ ಜನರ ಮನಸೂರೆಗೊಂಡಿದ್ದ ಶಿವಮೊಗ್ಗ ಸುಬ್ಬಣ್ಣ (83) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.
ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮಕ್ಕಳಾದ ಶ್ರೀರಂಗ ಮತ್ತು ಬಾಗೇಶ್ರೀ ಅವರನ್ನು ಅಗಲಿದ್ದಾರೆ.
ಸುಬ್ಬಣ್ಣ ಅವರು ಶಿವಮೊಗ್ಗ ಜಿಲ್ಲೆಯ ನಗರ ಎಂಬ ಸಣ್ಣ ಊರಿನಲ್ಲಿ 1938ರ ಡಿಸೆಂಬರ್ 14ರಂದು ಜನಿಸಿದರು. ತಂದೆ ಗಣೇಶರಾಯರು, ತಾಯಿ ರಂಗನಾಯಕಿ. ತಾತ ಶಾಮಣ್ಣ, ನಂತರ ಎಂ. ಪ್ರಭಾಕರ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿದರು. ಕವಿಗೀತೆಗಳನ್ನು ಹಾಡುವುದರಲ್ಲಿ ಆಕರ್ಷಿತರಾದ ಸುಬ್ಬಣ್ಣ ಅವರು, ಕುವೆಂಪು, ಬೇಂದ್ರೆ ಹಾಗೂ ನಾಡಿನ ಇನ್ನಿತರ ಶ್ರೇಷ್ಠ ಕವಿಗಳ ಕವಿತೆಗಳನ್ನು ರಾಗ ಸಂಯೋಜಿಸಿ ಹಾಡುವುದರ ಮೂಲಕ ಮನೆ ಮಾತಾದರು.




