‘ಮನೆ ಮನೆಗಳಲ್ಲಿ ರಾಷ್ಟ್ರಧ್ವಜ’ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ
ಬೆಂಗಳೂರು: ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ‘ಮನೆ ಮನೆಗಳಲ್ಲಿ ರಾಷ್ಟ್ರಧ್ವಜ’ ಅಭಿಯಾನಕ್ಕೆ ತ್ರಿವರ್ಣ ಬಣ್ಣದ ಬಲೂನ್ ಆಕಾಶಕ್ಕೆ ಹಾರಿಸಿ ಬಿಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಚಾಲನೆ ನೀಡಿದರು.
ವಿಧಾನಸೌಧದ ವಿಶಾಲವಾದ ಮೆಟ್ಟಿಲುಗಳ ಮೇಲೆ ತ್ರಿವರ್ಣ ಧ್ವಜ ಹಿಡಿದು ಸಾವಿರಾರು ವಿದ್ಯಾರ್ಥಿಗಳು ಈ ಅಭಿಯಾನದಲ್ಲಿ ಭಾಗವಹಿಸಿದರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ, ‘ಮನೆ ಮನೆಯ ಮೇಲೆ ರಾಷ್ಟ್ರಧ್ವಜ ಎನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಸಂದೇಶ. ಆ. 13ರಿಂದ 15ರವರೆಗೆ ಮೂರು ದಿನ ದೇಶದ 40 ಕೋಟಿ ಮನೆಗಳ ಮೇಲೆ ಇವತ್ತು ರಾಷ್ಟ್ರಧ್ವಜ ರಾರಾಜಿಸಲಿದೆ. ಈ ಕಾರ್ಯಕ್ರಮವನ್ನು ಐತಿಹಾಸಿಕ ಮೆಟ್ಟಿಲುಗಳ ಮೇಲೆ ಎಲ್ಲರೂ ಸೇರಿ ಮಾಡುತ್ತಿದ್ದೇವೆ’ ಎಂದರು.




