ಮಧ್ಯರಾತ್ರಿ ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಬಸ್: 16 ಜನರಿಗೆ ಗಾಯ
ವಿಜಯನಗರ: ಪಟ್ಟಣಕ್ಕೆ ಸಮೀಪದ ಅನಂತನಹಳ್ಳಿ ಬಳಿ ಮಂಗಳವಾರ ಮಧ್ಯರಾತ್ರಿ ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ 16 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಕ್ಕೆ ಶ್ರೀ ಹೆಸರಿನ ಕೆಎ 42, 6241 ನಂಬರಿನ ಖಾಸಗಿ ಬಸ್ ಹಡಗಲಿಯಿಂದ ಬೆಂಗಳೂರಿಗೆ ಹೊರಟಿತ್ತು. ಮಧ್ಯರಾತ್ರಿ 12.15 ರ ಸುಮಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಡೆದು, ರಸ್ತೆ ಬದಿ ಪಲ್ಟಿಯಾಗಿದೆ.
ಇದರಿಂದ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 16 ಜನ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಕಳಿಸಿದ್ದಾರೆ. ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.




