‘ತುರ್ತು ಪರಿಸ್ಥಿತಿಯಲ್ಲಿ ರೋಗಿಗಳು ಯಾವುದೇ ದಾಖಲೆ ನೀಡಬೇಕಿಲ್ಲ’-ಸಚಿವ ಸುಧಾಕರ್
ಬೆಂಗಳೂರು: ತುರ್ತು ಪರಿಸ್ಥಿತಿಯಲ್ಲಿ ರೋಗಿಯನ್ನು ದಾಖಲು ಮಾಡಿಕೊಳ್ಳಲು ಯಾವುದೇ ದಾಖಲೆಗಳು ಬೇಕಿಲ್ಲ, ಅವು ಮುಖ್ಯವೂ ಅಲ್ಲ. ಗರ್ಭಿಣಿ ಯಾವ ರಾಜ್ಯದವರೇ ಆದರೂ ದಾಖಲೆಯಿಲ್ಲದಕ್ಕೆ ಚಿಕಿತ್ಸೆ ನಿರಾಕರಿಸುವುದು ಸರಿಯಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಹಾಗೂ ನವಜಾತ ಶಿಶುಗಳು ಸಾವನ್ನಪ್ಪಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಅಮಾನವೀಯವಾಗಿ ನಡೆದುಕೊಳ್ಳುವ ವೈದ್ಯರು, ವೈದ್ಯಾಧಿಕಾರಿಗಳನ್ನು ಕೆಲಸದಿಂದಲೇ ವಜಾಗೊಳಿಸುವ ನಿಟ್ಟಿನಲ್ಲಿ ಕಾನೂನಿನಲ್ಲಿ ಬದಲಾವಣೆ ತರಲು ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದರು.
ಇನ್ನು ತುಮಕೂರು ಘಟನೆಯಲ್ಲಿ ವೈದ್ಯರು, ಸಿಬಂದಿ, ಜಿಲ್ಲಾ ಸರ್ಜನ್ ಅಮಾನವೀಯವಾಗಿ ನಡೆದುಕೊಂಡಿದ್ದು, ಕಾರಣ ಕೇಳಿ ಎಲ್ಲರಿಗೂ ನೋಟಿಸ್ ನೀಡಲಾಗಿದೆ. ಕರ್ತವ್ಯದಲ್ಲಿದ್ದ ವೈದ್ಯರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, 24 ಗಂಟೆಯೊಳಗೆ ಉತ್ತರ ನೀಡಲು ಸೂಚಿಸಲಾಗಿದೆ ಎಂದಿದ್ದಾರೆ.
ತುರ್ತು ಪರಿಸ್ಥಿತಿಯಲ್ಲಿ ತಾಯಿ ಕಾರ್ಡ್, ಆಧಾರ್ ಕಾರ್ಡ್ಗಳನ್ನು ಚಿಕಿತ್ಸೆಯ ನಂತರವೂ ಪಡೆದುಕೊಳ್ಳಬಹುದು. ದಾಖಲೆಗಿಂತ ಜೀವ ಮುಖ್ಯ ಎಂಬುದನ್ನು ಸಿಬಂದಿ ಅರಿಯಬೇಕಿತ್ತು. ಈ ಬಗ್ಗೆ ಹಿಂದೆಯೇ ಸೂಚಿಸಲಾಗಿದ್ದರೂ, ಆಸ್ಪತ್ರೆಯಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.





