March 20, 2026

ಬಾಬಾ ಬುಡನ್‌ ಗಿರಿಯಲ್ಲಿ ‘ದತ್ತಾತ್ರೇಯ ಜಯಂತಿ’ ನಡೆಸಲು ಹೈಕೋರ್ಟ್ ಅನುಮತಿ

0
image_editor_output_image808417127-1669872606890.jpg

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ ಗಿರಿಯ ದತ್ತಾತ್ರೇಯ ಪೀಠದಲ್ಲಿ ಡಿಸೆಂಬರ್ 6 ರಿಂದ 3 ದಿನಗಳ ಕಾಲ ದತ್ತಾತ್ರೇಯ ಜಯಂತಿ ಆಚರಿಸಲು ಕರ್ನಾಟಕ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.

ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿಯುದ್ದೀನ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಲೋಕ್ ಅರಾಧೆ ಮತ್ತು ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು “ಡಿಸೆಂಬರ್ 6, 7 ಮತ್ತು 8 ಎಂದು ದತ್ತಾತ್ರೇಯ ಜಯಂತಿ ನಡೆಸಲು ಉದ್ದೇಶಿಸಲಾಗಿದೆ. ದೇವಸ್ಥಾನದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸುವ ವಿಚಾರದಲ್ಲಿ ಉಸ್ತುವಾರಿ ವಹಿಸಲು ರಚಿಸಿರುವ ವ್ಯವಸ್ಥಾಪನಾ ಸಮಿತಿಯು ದತ್ತಾತ್ರೇಯ ಜಯಂತಿ ಆಚರಣೆಗೆ ಎಲ್ಲಾ ಸಿದ್ಧತೆ ನಡೆಸಿದೆ” ಎಂದರು.

“ವ್ಯವಸ್ಥಾಪನಾ ಸಮಿತಿ ಮತ್ತು ಭಕ್ತರು ದತ್ತಪೀಠದ ದತ್ತ ಪಾದುಕೆಗೆ ಪೂಜೆ ನೆರವೇರಿಸಲಿದ್ದಾರೆ. ಇಸ್ಲಾಂ ಮತ್ತು ಹಿಂದೂ ಧಾರ್ಮಿಕ ಸಂಪ್ರದಾಯದಂತೆ ದತ್ತಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಸಮಿತಿಯಿಂದ ಅರ್ಚಕ ಹಾಗೂ ಮುಜಾವರ್ ಅವರನ್ನು ನೇಮಿಸಲಾಗಿದೆ. ಪ್ರತಿದಿನ ಇಸ್ಲಾಂ ಮತ್ತು ಹಿಂದೂ ಸಮುದಾಯದವರು ದತ್ತ ಪಾದುಕೆಗೆ ಪೂಜೆ ನಡೆಸುತ್ತಿದ್ದಾರೆ. ಆದ್ದರಿಂದ ದತ್ತಾತ್ರೇಯ ಜಯಂತಿ ಆಚರಣೆಗೆ ಅನುಮತಿ ನೀಡಬೇಕು” ಎಂದು ಕೋರಿದರು. ಈ ಹೇಳಿಕೆ ದಾಖಲಿಸಿಕೊಂಡ ಪೀಠವು ದತ್ತಾತ್ರೇಯ ಜಯಂತಿ ಆಚರಣೆಗೆ ಅನುಮತಿ ನೀಡಿ ವಿಚಾರಣೆಯನ್ನು 2023ರ ಜನವರಿ 12ಕ್ಕೆ ಮುಂದೂಡಿತು.

Leave a Reply

Your email address will not be published. Required fields are marked *

error: Content is protected !!