ವಿಧಾನಸೌಧಕ್ಕೆ 10 ಲಕ್ಷ ಹಣ ಸಾಗಾಟ: ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಪೊಲೀಸ್ ವಶಕ್ಕೆ
ಬೆಂಗಳೂರು: ಮಂಡ್ಯ ಮೂಲದ ಸರ್ಕಾರಿ ನೌಕರನೊಬ್ಬನ ಬ್ಯಾಗ್ ಅನ್ನು ವಿಧಾನಸೌಧ ಗೇಟ್ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿದೆ ಎಂದು ವರದಿಯಾಗಿದೆ.
ಜಗದೀಶ್ ಎಂಬ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಬ್ಯಾಗ್ನಲ್ಲಿ ಶಕ್ತಿ ಸೌಧಕ್ಕೆ 10.5 ಲಕ್ಷ ರೂ. ನಗದು ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಲಕ್ಷಾಂತರ ರೂಪಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನು ಗೇಟ್ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಮಂಡ್ಯ ಮೂಲದ ಜಗದೀಶ್ ಬ್ಯಾಗ್ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿತ್ತು. ಆದರೆ ಹಣದ ಮೂಲದ ಕುರಿತಾಗಿ ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ಈ ವ್ಯಕ್ತಿ ನೀಡಿಲ್ಲ.
ಈ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ಕೂಡಾ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




