March 21, 2026

ಮಣಿಪಾಲ: ರಸ್ತೆ ಅಪಘಾತದಲ್ಲಿ ಮಹಿಳೆಯ ಮೆದುಳು ನಿಷ್ಕ್ರಿಯ: ಆರು ಮಂದಿಗೆ ಜೀವದಾನ
 

0
sharmila_250223_organ1.jpeg

ಮಣಿಪಾಲ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟ ಮಹಿಳೆಯೋರ್ವರು ಆರು ಮಂದಿಗೆ ಜೀವದಾನ ನೀಡಿದ ಘಟನೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಡೆದಿದೆ.

44 ವರ್ಷದ ಕೊಡೇರಿ ಶಿಲ್ಪಾ ಮಾಧವರವರಿಗೆ ಬೈಂದೂರು ತಾಲೂಕಿನ ಮರವಂತೆ ಬಳಿ ಮದ್ಯಾಹ್ನ 1.30 ಗಂಟೆಗೆ ರಸ್ತೆ ಅಪಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅದೇ ದಿನ ಸಂಜೆ 4.58 ಕ್ಕೆ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಪ್ರಸನ್ನ ಕುಮಾರ್ ಇವರ ಪತ್ನಿಯಾದ ಕೊಡೇರಿ ಶಿಲ್ಪಾ ಮಾಧವ ಅವರು ಅಪಘಾತದ ಪರಿಣಾಮದಿಂದ ತೀವ್ರತರವಾದ ಗಾಯವನ್ನು ಹೊಂದಿದ್ದರು.

ವೈದ್ಯರು ಗಾಯಾಳುವನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ . ಮಾನವ ಅಂಗಾಂಗ ಕಸಿ ಕಾಯ್ದೆ 1994 ರ ಅನುಸಾರ ಕೊಡೇರಿ ಶಿಲ್ಪಾ ಮಾಧವ ಅವರನ್ನು ಫೆಬ್ರವರಿ 26ರಂದು ಸಂಜೆ 6.29ಕ್ಕೆ ಮೊದಲ ಬಾರಿಗೆ ಮತ್ತು ಫೆಬ್ರವರಿ 27 ರಂದು ಬೆಳಿಗ್ಗೆ 1.35 ಕ್ಕೆ‌ ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು.

ಇನ್ನು ಶಿಲ್ಪಾ ಮಾಧವ ಅವರ ಪತಿ ಪ್ರಸನ್ನ ಕುಮಾರ್ ಮತ್ತು ಅವರ ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದು, ದಾನ ಮಾಡಿದ ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳು 6 ಜನರ ಜೀವ ಉಳಿಸಲು ಸಹಾಯವಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!