ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿಗೆ ಶಿಕ್ಷೆ, ಮೂವರು ಖುಲಾಸೆ
ಉತ್ತರ ಪ್ರದೇಶ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂದೀಪ್ ಸಿಸೋಡಿಯಾಗೆ ಉತ್ತರ ಪ್ರದೇಶದ ಎಸ್ಸಿ/ಎಸ್ಟಿ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ರ ಅಡಿಯಲ್ಲಿ ಸಂದೀಪ್ ಅವರದು ನರಹತ್ಯೆಯ ಅಪರಾಧವೆಂದು ಪರಿಗಣಿಸಲಾಗಿದೆ.
ಪ್ರಕರಣದ ನಾಲ್ವರು ಆರೋಪಿಗಳ ಪೈಕಿ ಮೂವರು ಆರೋಪಿಗಳಾದ ರವಿ(35), ಲವ್ ಕುಶ್(23) ಮತ್ತು ರಾಮು (26) ಅವರನ್ನು ಖುಲಾಸೆಗೊಳಿಸಲಾಗಿದ್ದು, ಸಂದೀಪ್(20) ಮಾತ್ರ ಅಪರಾಧಿ ಎಂದು ಸಾಬೀತಾಗಿದೆ.
2020 ರ ಸೆಪ್ಟೆಂಬರ್ನಲ್ಲಿ ಪಶ್ಚಿಮ ಉತ್ತರ ಪ್ರದೇಶದ ಹತ್ರಾಸ್ ಪ್ರದೇಶದ ಬೂಲ್ಗರ್ಹಿಯಲ್ಲಿ 20 ವರ್ಷದ ದಲಿತ ಮಹಿಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಹದಿನೈದು ದಿನಗಳ ನಂತರ ದಿಲ್ಲಿಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಜಿಲ್ಲಾಡಳಿತವು ಯುವತಿಯ ಗ್ರಾಮದಲ್ಲಿ ಮಧ್ಯರಾತ್ರಿ ವೇಳೆ ಅಂತ್ಯಕ್ರಿಯೆ ನಡೆಸಿತ್ತು. ಕೃತ್ಯವನ್ನು ಮುಚ್ಚಿಹಾಕಲು ಹೀಗೆ ಮಾಡಲಾಗಿತ್ತು ಎಂದು ಆರೋಪಿಸಲಾಗಿತ್ತು. ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರಕಾರದ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು




