ನಟೋರಿಯಸ್ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ ಸ್ನೇಹಿತರು
ಹಾಸನ: ನಟೋರಿಯಸ್ ರೌಡಿಶೀಟರ್ನನ್ನು ಜೊತೆಯಲ್ಲಿದ್ದ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿ ಗುಂಡಿ ತೆಗೆದು ಹೂತು ಹಾಕಿರುವ ಘಟನೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಂತೋಷ್ (36) ಅಲಿಯಾಸ್ ಪುಲ್ಲಿ ಕೊಲೆಯಾದ ರೌಡಿಶೀಟರ್. ಪುಲ್ಲಿಯ ರೈಟ್ ಹ್ಯಾಂಡ್ ಆಗಿದ್ದ ಪ್ರೀತಮ್ಗೌಡ (25) ಹಾಗೂ ಸ್ನೇಹಿತ ಕೀರ್ತಿ ಕೊಲೆ ಆರೋಪಿಗಳಾಗಿದ್ದಾರೆ.
ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಕರೆದೊಯ್ದು ದಟ್ಟ ಅರಣ್ಯ ಪ್ರದೇಶದಲ್ಲಿ ಮೂವರು ಎಣ್ಣೆ, ಗಾಂಜಾ ಸೇವಿಸಿ ಮತ್ತಿನಲ್ಲಿದ್ದ ವೇಳೆ ಪುಲ್ಲಿಯನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ನಂತರ ಕುರುವಂಗಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗುಂಡಿ ತೆಗೆದು ಹೂತು ಹಾಕಿ ವಾಪಸ್ ಮನೆಗೆ ಬಂದಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ ಆರೋಪಿಗಳು ಕೊಲೆ ರಹಸ್ಯ ಬಾಯ್ಬಿಟ್ಟಿದ್ದಾರೆ.
ಹಾಸನದ ದಾಸರಕೊಪ್ಪಲು ಗ್ರಾಮದ ಸಂತೋಷ್ ಅಲಿಯಾಸ್ ಪುಲ್ಲಿ ಕಾಲೇಜು ದಿನಗಳಿಂದಲೂ ರೌಡಿಸಂ ಮಾಡುತ್ತಿದ್ದ.
ಇವರ ಕಾಟ ತಾಳಲಾರದೆ ಹದಿನೈದು ವರ್ಷಗಳ ಹಿಂದೆಯೇ ಹಾಸನ ನಗರದ ಸ್ಲೇಟರ್ಸ್ ಹಾಲ್ ಬಳಿ ಗುಂಪೊಂದು ಅಟ್ಯಾಕ್ ಮಾಡಿ ಮಾರಕಾಸ್ತ್ರದಿಂದ ಹಲ್ಲೆ ಮಾಡಿ, ಕಲ್ಲು ಎತ್ತಿಹಾಕಿ, ಹಾರೆಯನ್ನು ದೇಹಕ್ಕೆ ಚುಚ್ಚಿ ಹೋಗಿದ್ದರು.
ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದ. ಆಸ್ಪತ್ರೆಯಿಂದ ಬಂದವನೆ ಮತ್ತೆ ರೌಡಿಸಂ ಶುರು ಮಾಡಿದ್ದ. ಇವನ ಜೊತೆ ಪ್ರೀತಮ್ ಹಾಗೂ ಕೀರ್ತಿ ಸಹ ಸೇರಿಕೊಂಡಿದ್ದರು.




