23 ಪ್ರಕರಣಗಳಲ್ಲಿ ಭಾಗಿಯಾಗಿದ್ದ 11 ಆರೋಪಿಗಳ ಬಂಧನ: 4.33 ಕೋಟಿ ರೂ. ಚಿನ್ನಾಭರಣ ವಶಕ್ಕೆ
ಬೆಂಗಳೂರು: ಕೇಂದ್ರ ವಿಭಾಗದ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 23 ಪ್ರಕರಣಗಳನ್ನು ಪತ್ತೆ ಮಾಡಲಾಗಿದ್ದು, 11 ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ ₹ 4.33 ಕೋಟಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ತಿಳಿಸಿದರು.
ಅಶೋಕನಗರದಲ್ಲಿ ಒಟ್ಟು 8 ಪ್ರಕರಣಗಳಲ್ಲಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.
223 ಗ್ರಾಂ ಚಿನ್ನ, ಬೆಳ್ಳಿ, ಹವಳ ಹಾಗೂ ನಗದು ವಶಕ್ಕೆ ಪಡೆಯಲಾಗಿದೆ. ವಿವೇಕನಗರದಲ್ಲಿ ಇಬ್ಬರನ್ನು ಬಂಧಿಸಿ, 300 ಗ್ರಾಂ ಚಿನ್ನ, ಎಸ್.ಆರ್.ನಗರದಲ್ಲಿ ಪ್ರಕರಣವೊಂದರಲ್ಲಿ 50 ಗ್ರಾಂ ಚಿನ್ನ, ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 8 ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಿಂದ 1 ಕೆ.ಜಿ 522 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.




