ಟಿಕೆಟ್ ಸಿಗುವುದಿಲ್ಲವೆಂಬ ಸಣ್ಣ ಸುಳಿವೂ ಇರಲಿಲ್ಲ: ಎಲ್ಲರೆದುರೇ ಕಣ್ಣೀರು ಸುರಿಸಿದ ರಘುಪತಿ ಭಟ್
ಉಡುಪಿ: ಉಡುಪಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ತಪ್ಪಿದ್ದಕ್ಕೆ ತೀವ್ರ ಅಸಮಾಧಾನ, ಬೇಸರ ವ್ಯಕ್ತಪಡಿಸಿರುವ ಶಾಸಕ ರಘುಪತಿ ಭಟ್, ನನಗೆ ಈ ಬಾರಿ ಪಕ್ಷದಿಂದ ಟಿಕೆಟ್ ಸಿಗುವುದಿಲ್ಲ ಎಂಬ ಸಣ್ಣ ಸುಳಿವೂ ಇರಲಿಲ್ಲ. ಟಿಕೆಟ್ ಸಿಗುವುದಿಲ್ಲ ಎನ್ನುವ ಬಗ್ಗೆ ಕನಸು ಮನಸ್ಸಿನಲ್ಲಿ ಊಹೆ ಮಾಡಿರಲಿಲ್ಲ. ಜಾತಿಯ ಕಾರಣಕ್ಕೆ ಬದಲಾವಣೆ ಮಾಡುತ್ತಾರೆ ಎನ್ನುವ ಆಲೋಚನೆಯೂ ಇರಲಿಲ್ಲ ಎಂದು ಹೇಳುತ್ತಾ ಭಟ್ ಎಲ್ಲರೆದುರೇ ಕಣ್ಣೀರು ಸುರಿಸಿದ ಪ್ರಸಂಗ ನಡೆಯಿತು.
ಟಿಕೆಟ್ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಿಲ್ಲ. ಆದರೆ ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ ಎಂದು ಹೇಳಿದ ಅವರು, ನಾನು ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.




