ಅನುಮತಿ ಪಡೆಯದೆ ರ್ಯಾಲಿ: ಕಾಂಗ್ರೆಸ್ ಶಾಸಕನ ವಿರುದ್ಧ ದೂರು ದಾಖಲು: 25 ಬೈಕ್ ಗಳನ್ನು ವಶಪಡಿಸಿಕೊಂಡ ಪೊಲೀಸರು
ವಿಜಯನಗರ: ಚುನಾವಣಾ ನೀತಿ ಸಂಹಿತಿ ಜಾರಿಯಲ್ಲಿದ್ದರೂ ಅನುಮತಿ ಪಡೆಯದೆ ಕಾಂಗ್ರೆಸ್ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಬೆಂಬಲಿಗರು ಶುಕ್ರವಾರ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯನ್ನು ಪೊಲೀಸರು ತಡೆದು 25 ಮೋಟಾರ್ ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಶಾಸಕ ಪರಮೇಶ್ವರ ನಾಯ್ಕ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಟವಾಳಗಿ ಕೊಟ್ರೇಶ್ ವಿರುದ್ಧ ಪಟ್ಟಣ ಠಾಣೆಯಲ್ಲಿ ನೀತಿ ಸಂಹಿತಿ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಬಿ. ಫಾರಂನೊಂದಿಗೆ ಕ್ಷೇತ್ರಕ್ಕೆ ಆಗಮಿಸುತ್ತಿದ್ದ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಅವರನ್ನು ಪಕ್ಷದ ಕಾರ್ಯಕರ್ತರು, ಬೆಂಬಲಿಗರು ತಾಲ್ಲೂಕಿನ ಕೊಮಾರನಹಳ್ಳಿ ತಾಂಡಾದ ಗಡಿಯಲ್ಲಿ ಸ್ವಾಗತಿಸಿ, ಅಲ್ಲಿಂದ ಶಾಸಕರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡುತ್ತಾ ಬೈಕ್ ರ್ಯಾಲಿಯಲ್ಲಿ ಪಟ್ಟಣಕ್ಕೆ ಕರೆ ತರುತ್ತಿದ್ದರು. ಕೆಲವರು ರ್ಯಾಲಿಯ ವಿಡಿಯೊವನ್ನು ಜಾಲತಾಣದಲ್ಲಿ ನೇರಪ್ರಸಾರ ಮಾಡಿದ್ದನ್ನು ಗಮನಿಸಿ ಅಧಿಕಾರಿಗಳು ಕಾರ್ಯಪ್ರವೃತ್ತರಾದರು.




